ರಾಜ್ಯ

ಕೊರೋನಾ ಮಾರ್ಗಸೂಚಿ ಪಾಲನೆ ಜೊತೆಗೆ ಈದ್ ಮಿಲಾದ್ ಆಚರಿಸಿ: ವಕ್ಫ್ ಇಲಾಖೆ ಮನವಿ

Manjula VN

ಬೆಂಗಳೂರು: ಕೊರೋನಾ ನಿಯಮಗಳನ್ನು ಕಟ್ಟನಿಟ್ಟಾಗಿ ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಅಕ್ಟೋಬರ್ 30ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ವಕ್ಫ್ ಇಲಾಖೆ ಮನವಿ ಮಾಡಿಕೊಂಡಿದೆ.

ಈದ್ ಮಿಲಾದ್ ಹಬ್ಬವನ್ನು ರಾಜ್ಯ ಸರ್ಕಾರ ನೀಡಿರುವ ಆದೇಶಗಳಂತೆ ಹಾಗೂ ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಮಾರ್ಗಸೂಚಿಗಳಂತೆ ಆಚರಣೆ ಮಾಡಬೇಕೆಂದು ಬೆಂಗಳೂರು ನಗರ ಉತ್ತರ ಜಿಲ್ಲೆಯ ವಕ್ಫ್ ಅಧಿಕಾರಿ ರಝಿಯಾ ಸುಲ್ತಾನಾ ಕೋರಿದ್ದಾರೆ.

ಮಹಾಮಾರಿ ಕೋರೋನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ಕುರಿತು ಸರ್ಕಾರದ ಆದೇಶ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ರಾಜ್ಯಾದ್ಯಂತ ದಿನಾಂಕ 30-10-2020 ರಂದು ಆಚರಿಸಲಿರುವ ಈ ಬಾರಿಯ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೆರವೇರಲಿರುವ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ ಜುಲೂಸ್, ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹಾಗೂ ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಸಭೆ ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19 ನಿಯಮಗಳೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಮೂಲಕ ದೈಹಿಕ ಅಂತರ ಕಾಪಾಡಿಕೊಂಡು ನೆರವೇರಿಸುವುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ಡಿಜಿಟಲ್ ಸೌಂಡ್ ಸಿಸ್ಟಮ್ ಡಿಜೆ ಬಳಕೆಯನ್ನು ನಿಷೇಧಿಸಲಾಗಿದೆ.

ಮಾಸ್ಕ್, ಗ್ಲೌಸ್ ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಹಬ್ಬವನ್ನು ಆಚರಿಸುವುದು. ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈತೊಳೆಯಲು ಸೂಕ್ತ ವ್ಯವಸ್ಥೆಯನ್ನು ಮಾಡುವುದು ಕಡ್ಡಾಯವಾಗಿ ಎಲ್ಲರೂ 6 ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು. ಖಬರಸ್ಥಾನ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಪ್ರಾರ್ಥನೆ ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದೆ.

ಸರ್ಕಾರದ ಸುತ್ತೋಲೆಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅನುಸರಿಸುವುದು. ಈದ್ ಮಿಲಾದ್ ಹಬ್ಬದ ಆಚರಣೆ ಕುರಿತು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

SCROLL FOR NEXT