ಬೆಂಗಳೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿಯೊಬ್ಬಳು ಪತಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರು ಮೂಲದ ಸುಜಾತಾ ಆತ್ಮಹತ್ಯೆ ಮಾಡಿಕೊಂಡವರು. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಸುಶಾಂತ್ ಎಂಬಾತನನ್ನು ಪ್ರೀತಿಸುತ್ತಿದ್ದ ಸುಜಾತಾ ಬಳಿಕ ಮನೆಯವರಿಗೆ ತಿಳಿಸದೆ ಬೆಂಗಳೂರಿನಲ್ಲಿ ಮದುವೆಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.
ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿಯ ನಡುವೆ ಕ್ರಮೇಣ ಅಸಮಾಧಾನ, ಭಿನ್ನಾಭಿಪ್ರಾಯ ಉಂಟಾಗಿದೆ. ಈ ಮಧ್ಯೆ ಪತಿ ಸುಶಾಂತ್ ವರದಕ್ಷಿಣೆ ತರುವಂತೆ, ಪತ್ನಿಯ ಆಸ್ತಿ ನೀಡುವಂತೆ ಕೇಳುತ್ತಿದ್ದ. ಇದೇ ಕಾರಣದಿಂದ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ಸುಜಾತಾ ಅವರ ಕುಟುಂಬದವರು ಆರೋಪಿಸಿದ್ದಾರೆ.
ಮೃತರ ತಂದೆ ಭದ್ರೇಗೌಡ ನೀಡಿದ ದೂರಿನ ಮೇರೆಗೆ ಆರೋಪಿ ಸುಶಾಂತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.