ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸಿ, ಉಗುಳುವುದು ನಿಷೇಧ: ಪಿ.ಎನ್.ರವೀಂದ್ರ

Srinivasamurthy VN

ಬೆಂಗಳೂರು: ಕೋವಿಡ್ 19 ಹಿನ್ನೆಲೆ ಬೀಡಿ, ಸಿಗರೇಟು, ಗುಟ್ಕಾ, ಪಾನ್‌ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಜಗಿದು, ಉಗಿಯುವಂತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗೆ ಬೆಂಗಳೂರು ಗ್ರಾಮಾಂತರ  ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಹಾರ ಭದ್ರತಾ ಕಾಯ್ದೆಯನ್ನು ಉಲ್ಲಂಘಿಸುವ ಹೋಟೆಲ್ ಅಂಗಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ಎಂದರಲ್ಲದೆ, 2003 ರ ಕೋಟ್ಪಾ ಕಾಯಿದೆಯಡಿಯಲ್ಲಿ ಸೆಕ್ಷನ್ 4 ಮತ್ತು 6 ಬಿ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳ ಆವರಣದಿಂದ 100 ಗಜ ಅಂತರದಲ್ಲಿ ಧೂಮಪಾನ  ಮಾಡುವುದು, ತಂಬಾಕು ಉತ್ಪನ್ನಗಳನ್ನು ಅಂಗಡಿ ಮಳಿಗೆಗಳಲ್ಲಿ ಮಾರಾಟ ಮಾಡುವಂತಿಲ್ಲ ಎಂದರಲ್ಲದೆ, ಶಾಲಾ-ಕಾಲೇಜು ಮಕ್ಕಳಲ್ಲಿ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ದಿನಕಳೆದಂತೆ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಸೋಂಕಿತರಿಂದ ಬರುವ ಡ್ರಾಪ್ ಲೆಟ್ಸ್ ಗಳು ಇತರರಿಗೂ ಸೋಂಕು ತಗುಲುವಂತೆ ಮಾಡುತ್ತಿದೆ. ಅಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವಿಸಿ ಉಗುಳುವುದರಿಂದಲೂ ಸೋಂಕು  ಪ್ರಸರಣವಾಗುವ ಸಾಧ್ಯತೆ ಗಳಿರುವುದರಿಂದ ಹಿಂದೆಯೇ ಕೇಂದ್ರ ಆರೋಗ್ಯ ಇಲಾಖೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸಿ, ಉಗುಳುವುದನ್ನು ನಿಷೇಧಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಳಿಗೆ ಸೂಚಿಸಿತ್ತು. 

SCROLL FOR NEXT