ಬೆಂಗಳೂರು: ಶರಾವತಿ ಕಣಿವೆಯಲ್ಲಿ ಉದ್ದೇಶಿತ ಭೂಗರ್ಭ ಜಲ ವಿದ್ಯುತ್ ಯೋಜನೆಯ ಸಮೀಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಗುರುವಾರ ರಾಜ್ಯ ವನ್ಯಜೀವಿ ಮಂಡಳಿ, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ನೋಟಿಸ್ ಜಾರಿಗೊಳಿಸಿದೆ.
ಬಳ್ಳಾರಿಯ ಎಡ್ವರ್ಡ್ ಸಂತೋಷ್ ಮಾರ್ಟಿನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಸಿಜೆ ಎ.ಎಸ್.ಓಕಾ ಮತ್ತು ನ್ಯಾ.ಅಶೋಕ್ ಎಸ್. ಕಿಣಗಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಕರ್ನಾಟಕ ವಿದ್ಯುತ್ ನಿಗಮ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯ ವನ್ಯಜೀವಿ ಮಂಡಳಿ, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರಾದ ಶ್ರೀಜಾ ಚಕ್ರವರ್ತಿ, ಶರಾವತಿ ಕಣಿವೆಯಲ್ಲಿ ಉದ್ದೇಶಿತ ಭೂಗರ್ಭ ಜಲ ವಿದ್ಯುತ್ ಯೋಜನೆಯ ವ್ಯಾಪ್ತಿಯ ಪ್ರದೇಶವು ಸಿಂಗಳೀಕ ಎಂದು ಕರೆಸಿಕೊಳ್ಳುವ ಸಿಂಹದ ಬಾಲ ಹೋಲುವ ಅಪರೂಪದ ಮಂಗಗಳ ಸಂರಕ್ಷಿತ ವಲಯ ಒಳಗೊಂಡಿದೆ. ಯೋಜನೆಗೆ ಸಮೀಕ್ಷೆ ಕಾಮಗಾರಿ ಕೈಗೊಂಡಿರುವುದರಿಂದ ಸಿಂಗಳೀಕ ತಳಿ ಅಪಾಯ ದಲ್ಲಿದೆ' ಎಂದು ನ್ಯಾಯಾಲಯದ ಗಮನಸೆಳೆದರು.
ಯೋಜನೆಗೆ ಸಮೀಕ್ಷೆ ಹಾಗೂ ಭೌಗೋಳಿಕ ತಾಂತ್ರಿಕ ತನಿಖೆ ನಡೆಸುವ ಪ್ರಸ್ತಾವನೆಗೆ ಅನುಮೋದನೆ ನೀಡಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು 2020ರ ಏ.7ರಂದು ಕೈಗೊಂಡ ನಿರ್ಣಯ ರದ್ದುಗೊಳಿಸಬೇಕು. ಈ ಸಂಬಂಧ ರಾಜ್ಯ ವನ್ಯಜೀವಿ ಮಂಡಳಿ 2019ರ ಸೆ.26ರಂದು ಕಳಿಸಿದ ಶಿಫಾರಸು ರದ್ದುಗೊಳಿಸಬೇಕು ಎಂದು ಅರ್ಜಿ ದಾರರು ನ್ಯಾಯಾಲಯವನ್ನು ಕೋರಿದ್ದಾರೆ. ಇದಲ್ಲದೆ, ಅರ್ಜಿ ವಿಚಾರಣೆ ಮುಕ್ತಾಯಗೊಳ್ಳುವವರೆಗೆ ಸಮೀಕ್ಷೆ ಕಾರ್ಯ ಕೈಗೊಳ್ಳದಂತೆ ಕರ್ನಾಟಕ ವಿದ್ಯುತ್ ನಿಗಮಕ್ಕೆ ಸೂಕ್ತ
ನಿರ್ದೇಶನ ನೀಡಬೇಕೆಂದೂ ಅರ್ಜಿಯಲ್ಲಿ ಕೋರಲಾಗಿದೆ.
ಯೋಜನೆಯಿಂದ ಸುಮಾರು 877.57 ಹೆಕ್ಟೇರ್ ವನ್ಯಜೀವಿ ಸಂರಕ್ಷಿತ ಅರಣ್ಯ ಪ್ರದೇಶದ ಮೇಲೆ ಪರಿಣಾಮ ಬೀರಲಿದೆ, ಅಭಯಾರಣ್ಯವೂ ಉತ್ತರ ಕನ್ನಡ ಮತ್ತು ಶಿವಮೊಗ್ಗದವರೆಗೂ ಹರಡಿದೆ.