ರಾಜ್ಯ

ಮೂವರು ಅರ್ಚಕರ ಹತ್ಯೆ: ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಸಚಿವರಿಂದ ಸನ್ಮಾನ

Lingaraj Badiger

ಮಂಡ್ಯ: ಜಿಲ್ಲೆಯ ಅರ್ಕೇಶ್ವರ ದೇವಸ್ಥಾನದಲ್ಲಿ ಮೂವರು ಅರ್ಚಕರನ್ನು ದರೋಡೆಮಾಡಿ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಬುಧವಾರ ಸನ್ಮಾನಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ರಾಷ್ಟ್ರದ ರಕ್ಷಣೆಯಲ್ಲಿ ಸೈನಿಕರು ಹೇಗೆ ತಮ್ಮ ಪ್ರಾಣದ ಹಂಗನ್ನು ತೊರೆದು ರಾಷ್ಟ್ರದ ರಕ್ಷಣೆ ಮಾಡುತ್ತಾರೋ ಹಾಗೆಯೇ ಸಮಾಜದ ಸ್ವಾಸ್ತ್ಯ ಕಾಯುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹಳ ಪ್ರಮುಖವಾಗಿದೆ ಎಂದರು. ಅಲ್ಲದೆ ಈ ಪ್ರಕರಣವನ್ನು ಭೇದಿಸಿ ಜಿಲ್ಲೆಯ ಜನರಲ್ಲಿ ವಿಶ್ವಾಸ ತುಂಬಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಮಂಡ್ಯ ಜಿಲ್ಲೆಯಲ್ಲಿನ ಅರ್ಕೇಶ್ವರ ದೇವಾಲಯದ ಘಟನೆಯು ಇಡೀ ರಾಜ್ಯವನ್ನು ತಲ್ಲಣಗೊಳಿಸಿದ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಶುಭಕೋರಿದರು.

ಮಂಡ್ಯದ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ, ಹುಂಡಿಯ ಹಣ ಲೂಟಿ ಮಾಡಿದ್ದ ಆರೋಪಿಗಳನ್ನು ಮಂಡ್ಯ ಪೊಲೀಸರು ಕಳೆದ ಸೋಮವಾರ ಬಂಧಿಸಿದ್ದರು.

SCROLL FOR NEXT