ರಾಜ್ಯ

ರೈತರ ಅಹೋರಾತ್ರಿ ಧರಣಿ ಮುಂದುವರಿಕೆ; ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧಾರ

Lingaraj Badiger

ಬೆಂಗಳೂರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗಳಿಗೆ ತಿದ್ದುಪಡಿ ವಿರೋಧಿಸಿ ನಿನ್ನೆಯಿಂದ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಕಾರ್ಯಕರ್ತರು ಆರಂಭಿಸಿರುವ ಅಹೋರಾತ್ರಿ ಪ್ರತಿಭಟನೆ ಮಂಗಳವಾರ ಸಹ ಮುಂದುವರಿಸಿದ್ದು, ಫ್ರೀಡಂ ಪಾರ್ಕ್ ನಲ್ಲಿ ನೂರಾರು ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರಾಜ್ಯ ಸರ್ಕಾರ ಕಾರ್ಪೊರೇಟ್ ವಲಯಗಳನ್ನು ಬೆಳೆಸುವಂತಹ, ರೈತರಿಗೆ ಮಾರಕವಾಗುವಂತಹ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ರೈತ ಸಮುದಾಯವನ್ನು ಸರ್ವನಾಶ ಮಾಡುವ ಈ ಕಾಯ್ದೆಗಳು ಅವೈಜ್ಞಾನಿಕವಾಗಿವೆ. ಭೂಸುಧಾರಣಾ ಕಾಯ್ದೆ ಜಾರಿಯಾದರೆ ಕೃಷಿ ಕ್ಷೇತ್ರ ಅಧಃಪತನದತ್ತ ಸಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಪಿಎಂಸಿ, ವಿದ್ಯುತ್ ಕಾಯ್ದೆ ತಿದ್ದುಪಡಿಗಳು ಕೂಡ ರೈತರ ಹಕ್ಕನ್ನು ಕಸಿದುಕೊಳ್ಳುವ ಕಾಯ್ದೆಗಳಾಗಿವೆ. ಇವುಗಳ ವಿರುದ್ಧ ಹೋರಾಟವನ್ನು ಪ್ರಾರಂಭಿಸಿದ್ದೇವೆ ಎಂದರು.

ದೇಶಾದ್ಯಂತ ಈಗಾಗಲೇ ಕೃಷಿ ಮಸೂದೆಗಳ ವಿರುದ್ಧ ಹೋರಾಟ ನಡೆಯುತ್ತಿದೆ. ರಾಜ್ಯದಲ್ಲೂ ಹೋರಾಟವನ್ನು ತೀವ್ರಗೊಳಿಸುತ್ತೇವೆ. ರೈತರಿಂದ ಅಕಾರಕ್ಕೆ ಬಂದ ಸರ್ಕಾರಗಳು ರೈತರನ್ನು ನಾಶ ಮಾಡುವಂತಹ ಕಾಯ್ದೆಗಳನ್ನು ಜನರಿಗೆ ತರುತ್ತವೆ. ಕಾರ್ಪೊರೇಟ್ ವಲಯಗಳನ್ನು ಪೋಷಿಸಲು ಮುಂದಾಗುತ್ತವೆ. ಇವುಗಳಿಗೆ ಯಾವುದೇ ಕಾರಣಕ್ಕೂ ನಾವು ಆಸ್ಪದ ಕೊಡುವುದಿಲ್ಲ ಎಂದು ಹೇಳಿದರು.

SCROLL FOR NEXT