ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ನಾರಾಯಣರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.
ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಮನೀಶ್ ರೈ ಅವರು ಹೇಳಿದ್ದಾರೆ.
ನಾರಾಯಣರಾವ್ ಅವರು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಕೆಲ ವಾರಗಳ ಹಿಂದೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ಜ್ವರದಿಂದ ಬಳಲುತ್ತಿದ್ದರು.
ಬೀದರ್ ಜಿಲ್ಲೆಯ ಬಸವಕಲ್ಯಾಣದ ಶಾಸಕರಾದ ರಾವ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಲ್ಲಿಕಾರ್ಜುನ್ ಖೂಬಾ ಮತ್ತು ಜೆಡಿಎಸ್ನ ಪಿಜಿಆರ್ ಸಿಂಧಿಯಾ ಅವರನ್ನು ಸೋಲಿಸಿದರು.