ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಕಳೆದಂತೆ ಕೊರೋನಾ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಸೋಂಕು ನಿಯಂತ್ರಕ್ಕೆ ತರುವ ಸಲುವಾಗಿ ನಗರದ ಆಸ್ಪತ್ರೆಗಳು, ಕೋವಿಡ್ ಕೇರ್ ಕೇಂದ್ರ, ಹೋಟೆಲ್, ಹಾಸ್ಟೆಲ್ ಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣಪುಟ್ಟ ಲಕ್ಷಣಗಳು ಹಾಗೂ ಲಕ್ಷಣ ಇಲ್ಲದೇ ಇರುವವರು ಆಸ್ಪತ್ರೆಗೆ ದಾಖಲಾಗುವುದನ್ನು ನಿಯಂತ್ರಿಸಬೇಕು. ಇದರಿಂದ ಗಂಭೀರ ಸ್ಥಿತಿಯಲ್ಲಿರುವವರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಕೊರೋನಾ ನಿಯಂತ್ರಿಸಲು ನಗರದ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ರೋಗಿಗಳಿಗೆ ಮೀಸಲಿಟ್ಟ 150 ಹಾಸಿಗೆಗಳ ಸಂಖ್ಯೆಯನ್ನು 500ಕ್ಕೆ ಹೆಚ್ಚಳ ಮಾಡಲಾಗಿದೆ. ಬೌರಿಂಗ್ ಆಸ್ವತ್ರೆಯಲ್ಲೂ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಹಾಸಿಗೆ ಸಾಮರ್ಥ್ಯ ಹೆಚ್ಚಿಸಲಾಗುತ್ತಿದೆ. ಜೊತೆಗೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಖಾಸಗಿ ಆಸ್ಪತ್ರೆಗಳಲ್ಲಿ 4,300 ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ಹಾಸಿಗೆಗಳನ್ನು ಮೀಸಲಿಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬಿಬಿಎಂಪಿಯ ಪ್ರತಿ ವಲಯಗಳಲ್ಲಿ ರಚಿಸುತ್ತಿರುವ ವಾರ್ ರೂಮ್ ಮೂಲಕ ಹಾಸಿಗೆಗಳನ್ನು ಅಗತ್ಯವಿರುವ ರೋಗಿಗಳಿಗೆ ಹಂಚಿಕೆ ಮಾಡಲಾಗುವುದು. ಸೋಂಕು ತಗುಲಿರುವುದು ದೃಢಪಟ್ಟವರೆಲ್ಲಾ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.