ರಾಜ್ಯ

ಕೋವಿಡ್ ಎಫೆಕ್ಟ್: ಬಂಡೀಪುರ ವೀಕೆಂಡ್ ಸಫಾರಿ ಬಂದ್, ಜಿಲ್ಲೆ ಪ್ರವೇಶಕ್ಕೆ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ!

Manjula VN

ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದು, ರಾಜ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಮಂಡಳಿ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಪ್ರವಾಸಿ ತಾಣಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಿದ್ದಾರೆ.

ಈ ಸಂಬಂಧ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೋಮವಾರ ಆದೇಶ ಹೊರಡಿಸಿದ್ದು, ಆಗಸ್ಟ್‌ 15ರವರೆಗೆ ಇದು ಜಾರಿಯಲ್ಲಿರಲಿದೆ. 

ಆದೇಶದಲ್ಲಿ ಬಂಡೀಪುರ, ಬಿಆರ್‌ಟಿಯ ಕೆ.ಗುಡಿಯಲ್ಲಿ ಸಫಾರಿ ನಡೆಸಲು 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಸಿಪಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಪ್ರಮಾಣ ಪತ್ರ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ರೆಸಾರ್ಟ್‌, ಹೋಂ ಸ್ಟೇ, ಲಾಡ್ಜ್‌, ಅರಣ್ಯ ಇಲಾಖೆಯ ವಸತಿಗೃಹಗಳಲ್ಲಿ ರಾತ್ರಿ ತಂಗಲು ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿಯನ್ನು ತೋರಿಸಬೇಕು. 

ಇನ್ನು ಪ್ರಸಿದ್ಧ ಪ್ರವಾಸಿ ತಾಣಗಳಾದ ಭರಚುಕ್ಕಿ ಜಲಪಾತ, ಹೊಗೇನಕಲ್‌ ಜಲಪಾತ ಪ್ರದೇಶಗಳಿಗೆ ಶನಿವಾರ ಮತ್ತು ಭಾನುವಾರ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. 

ಆದೇಶದ ಹಿನ್ನೆಲೆಯಲ್ಲಿ ವೀಕೆಂಡ್ ಸಫಾರಿಗಳನ್ನು ಬಂದ್ ಮಾಡಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಇಳಿಯುವವರು ಆರ್'ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ನಿರ್ದೇಶಕ ಡಾ.ಮಹೇಶ್ ಕುಮಾರ್ ಅವರು ಮಾತನಾಡಿ, ಮೈಸೂರು ಹಾಗೂ ಕೊಡಗು ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಎರಡೂ ಜಿಲ್ಲೆಗಳೂ ಕಬಿನಿಗೆ ಹತ್ತಿರವಿದ್ದು, ಸೋಂಕು ಹೆಚ್ಚಾಗುತ್ತಿರುವುದು ನಮ್ಮಲ್ಲೂ ಆತಂಕ ಸೃಷ್ಟಿಸಿದೆ ಎಂದು ಹೇಳಿದ್ದಾರೆ. 

ನಮ್ಮಲ್ಲೂ ಕೋವಿಡ್ ನೆಗೆಟಿವ್ ವರದಿ ಹಾಗೂ ಲಸಿಕೆ ಪ್ರಮಾಣಪತ್ರ ಕಡ್ಡಾಯ ಮಾಡಲು ಚಿಂತನೆ ನಡೆಸಲಾಗಿದೆ. ಆದರೆ, ಆರೋಗ್ಯ ಇಲಾಖೆಯಿಂದ ಸೂಕ್ತ ಬೆಂಬಲಗಳು ಸಿಗುತ್ತಿಲ್ಲ. ಆದರೆ, ಕೇರಳ ಗಡಿಯಲ್ಲಿ ಪ್ರವೇಶಗಳ ಮೇಲೆ ನಿರ್ಬಂಧಗಳನ್ನು ವಿಧಿಸಿರುವುದು, ಹೆಚ್ಚು ಜನಸಂಖ್ಯೆ ಸೇರದಂತೆ ಹಾಗೂ ಕೋವಿರ್-19 ನಿರ್ವಹಣೆ ಮಾಡಲು ಸಹಾಯವಾಗಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT