ರಾಜ್ಯ

ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಇಲ್ಲ: ಸಚಿವ ಶ್ರೀರಾಮುಲು

Nagaraja AB

ಬಳ್ಳಾರಿ: ಸಾರಿಗೆ ಸಚಿವ ಬಿ. ಶ್ರೀರಾಮುಲು ಇಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ಕಛೇರಿಗೆ ಭೇಟಿ ನೀಡಿ, ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಸದ್ಯಕ್ಕೆ  ಬಸ್ ಪ್ರಯಾಣ ದರವನ್ನು ಏರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಸ್ ದರ ಹೆಚ್ಚಿಸಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಇದರ ಬದಲಿಗೆ ಎಲೆಕ್ಟ್ರಿಕಲ್ ಬಸ್ ಗಳನ್ನು ಓಡಿಸಲು ಯೋಜನೆ ರೂಪಿಸಲಾಗಿದ್ದು, ಟೆಂಡರ್ ಕೂಡಾ ಕರೆಯಲಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಗಾಗಿ ಪ್ರತ್ಯೇಕವಾಗಿ ಅನುದಾನ ನೀಡುವ ವಿಶ್ವಾಸವಿದೆ ಎಂದು ಹೇಳಿದರು. 

ಮೊದಲ ಹಂತದಲ್ಲಿ ಬೆಂಗಳೂರು ಸೇರಿ ದೊಡ್ಡ ನಗರಗಳಲ್ಲಿ ಎಲೆಕ್ಟ್ರಿಕಲ್ ಬಸ್ ಓಡಿಸಲಾಗುವುದು, ಆರಂಭದಲ್ಲಿ 700 ಬಸ್ ಖರೀದಿಸಲಿದ್ದೇವೆ ಎಂದು ಅವರು ತಿಳಿಸಿದರು.

ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ತೀವ್ರ ನಷ್ಟದಲ್ಲಿವೆ. ಪ್ರಸಕ್ತ ಸಾಲಿನಲ್ಲಿ 510 ಕೋಟಿ ರೂ. ನಷ್ಟವಾಗಿದೆ. ಕಳೆದ ವರ್ಷ 1280 ಕೋಟಿ ನಷ್ಟವಾಗಿತ್ತು. ನಷ್ಟದಲ್ಲಿರುವ ನಿಗಮಗಳನ್ನು ಲಾಭದತ್ತ ಕೊಂಡೊಯ್ಯುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ಸಂಸ್ಥೆಯನ್ನು ನಷ್ಟದಿಂದ ಹೊರ ತರಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಹಳೆಯ ಬಸ್ ಗಳನ್ನು ಗುಜರಿಗೆ ಬಿಸಾಡುವ ಕೇಂದ್ರ ಸರ್ಕಾರದ ನೀತಿ ಚೆನ್ನಾಗಿದೆ. ಪ್ರಧಾನ ಮಂತ್ರಿ ಮೋದಿಯವರ ಸೂಚನೆಯಂತೆ ಈ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಶ್ರೀರಾಮುಲು ಹೇಳಿದರು. 

SCROLL FOR NEXT