ರಾಜ್ಯ

ಬೆಂಗಳೂರು: ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿ ಡಾಲಿ ಸಾವು

Vishwanath S

ಬೆಂಗಳೂರು: 34 ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಚಂದ್ರಾಲೇಔಟ್ ಪೊಲೀಸರಿಂದ ಬಂಧನಕ್ಕೊಳಗಾಗಿ ಸೆಂಟ್ರಲ್ ಜೈಲಿನಲ್ಲಿದ್ದ ವಿಚಾರಣಾಧೀನ‌ ಕೈದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕೆ.ಪಿ ಅಗ್ರಹಾರ ನಿವಾಸಿ ಗಜೇಂದ್ರ ಅಲಿಯಾಸ್ ಡಾಲಿ ಮೃತ ಕೈದಿ. ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಜೇಂದ್ರ ಜೈಲು ಪಾಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದನು. ಜು.31ರಂದು ಗಿರಿನಗರ ಸೇರಿ ವಿವಿಧ ಕಡೆಗಳಲ್ಲಿ ತನ್ನ ಸಹಚರರೊಂದಿಗೆ ಸೇರಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಆ.12ರಂದು ಚಂದ್ರಾಲೇಔಟ್ ವ್ಯಾಪ್ತಿಯ ವೃದ್ದೆಯೊಬ್ಬರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದನು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಗಿರಿನಗರದಲ್ಲಿ ಗಜೇಂದ್ರ ಸೇರಿ ಆತನ ಸಹಚರರು ಅವಿತುಕುಳಿತುಕೊಂಡಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಬಂಧಿಸಲು ಮುಂದಾಗಿದ್ದರು‌. ಈ ವೇಳೆ, ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಗಜೇಂದ್ರ ಕಟ್ಟಡದಿಂದ ಹಾರಿ ಕೆಳಗೆ ಬಿದ್ದು ಎಡಗಾಲಿಗೆ ಗಾಯಮಾಡಿಕೊಂಡಿದ್ದರು. ಬಳಿಕ ಆತನನ್ನು ಪೊಲೀಸರು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಗಜೇಂದ್ರನನ್ನು ಆ.17ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅದೇ ದಿನ ರಾತ್ರಿ ವಿಪರೀತ ಕಾಲು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳ ಅನುಮತಿ ಪಡೆದು ಸಿಬ್ಬಂದಿ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.‌ಆದರೆ, ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

SCROLL FOR NEXT