ರಾಜ್ಯ

ಪಶ್ಚಿಮ ಘಟ್ಟದಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಸಮೀಕ್ಷೆಗೆ ಹೈಕೋರ್ಟ್ ಆದೇಶ

Lingaraj Badiger

ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ನಡುವಿನ ರೈಲು ಮಾರ್ಗದಿಂದ ವನ್ಯಜೀವಿಗಳ ಮೇಲೆ ಆಗಬಹುದಾದ ಪರಿಣಾಮದ ಕುರಿತು ಸಮೀಕ್ಷೆ ಮತ್ತು ವಿಶ್ಲೇಷಣೆ ನಡೆಸುವಂತೆ ಬುಧವಾರ ಕರ್ನಾಟಕ ಹೈಕೋರ್ಟ್ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ನಿರ್ದೇಶಿಸಿದೆ.

ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಹುಬ್ಬಳ್ಳಿ-ಅಂಕೋಲಾ ನೂತನ ಬ್ರಾಡ್ಗೇಜ್ ರೈಲು ಮಾರ್ಗ ನಿರ್ಮಿಸಲು ವಿವೇಚನಾರಹಿತವಾಗಿ ಒಪ್ಪಿಗೆ ನೀಡಿ ಶಿಫಾರಸು ಮಾಡಿರುವುದನ್ನು ಪ್ರಶ್ನಿಸಿ ಪ್ರಾಜೆಕ್ಟ್ ವೃಕ್ಷ ಒಕ್ಕೂಟ ಸೇರಿದಂತೆ ಹಲವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

“ಅರಣ್ಯ ಪ್ರದೇಶದಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಿಸುವುದರಿಂದ ವನ್ಯಜೀವಗಳ ಮೇಲೆ ಉಂಟಾಗಬಹುದಾದ ದುಷ್ಪರಿಣಾಮದ ಕುರಿತು ವಿಶ್ಲೇಷಣೆ ನಡೆಸುವಂತೆ ಹಾಗೂ ಆಕ್ಷೇಪಾರ್ಹ ಪ್ರದೇಶದಲ್ಲಿ ಸಮೀಕ್ಷೆ ನಡೆಸುವಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ.

“ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯಿಂದ ವನ್ಯಜೀವಿಗಳ ಮೇಲೆ ಆಗಬಹುದಾದ ಪರಿಣಾಮಗಳ ಕುರಿತು ಹಲವು ಮಂಡಳಿಗಳು ಮತ್ತು ಪ್ರಾಧಿಕಾರಗಳು ಸಲ್ಲಿಸಿರುವ ವರದಿಗಳನ್ನು ಪರಿಶೀಲಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯು ಸ್ವತಂತ್ರ ವಿಶ್ಲೇಷಣಾ ವರದಿ ಸಿದ್ಧಪಡಿಸಬಹುದು. ಇದಕ್ಕೆ ತಜ್ಞರ ಅಗತ್ಯ ಉದ್ಭವಿಸಿದರೆ ಅವರನ್ನೂ ರಾಷ್ಟ್ರೀಯ ವನ್ಯಜೀವಿ ಮಂಡಳಿ ಒಳಗೊಳ್ಳಬಹುದಾಗಿದೆ” ಎಂದು ಪೀಠ ಹೇಳಿದೆ.

“ಅಭಿವೃದ್ಧಿ ಕೆಲಸಗಳು ನಡೆಯಬೇಕು ಎಂಬುದು ನಮಗೂ ಅರ್ಥವಾಗುತ್ತದೆ. ಅದಾಗ್ಯೂ, ಈ ಅಭಿವೃದ್ಧಿ ಯೋಜನೆಯಿಂದ ವನ್ಯಜೀವಿಗಳು ಹಾಗೂ ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮವನ್ನು ಪರಿಶೀಲಿಸಬೇಕಿದೆ. ನಮ್ಮೆಲ್ಲಾ ಪ್ರಯತ್ನಗಳು ವನ್ಯಜೀವಿಗಳನ್ನು ರಕ್ಷಿಸುವ ನಿಟ್ಟಿನಲ್ಲಿರಬೇಕು” ಎಂದು ನ್ಯಾಯಾಲಯ ಹೇಳಿದೆ.

SCROLL FOR NEXT