ರಾಜ್ಯ

ಮನೆ-ಮನೆ ತೆರಳಿ ಕೋವಿಡ್ ಲಸಿಕೆ: ಆಶಾ ಕಾರ್ಯಕರ್ತರೊಂದಿಗೆ ಕೈಜೋಡಿಸಿದ ಜಲಮಂಡಳಿ ಇಲಾಖೆ ನೌಕರರು!

Manjula VN

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಹೊರಗೆ, ಅರೆ ನಗರ ಪ್ರದೇಶಗಳು ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಪೂರ್ಣಗೊಳಿಸಲು ಜಿಲ್ಲಾಡಳಿತ ಮಂಡಳಿಯು ಅಧಿಕಾರಿಗಳಿಗೆ 10 ದಿನಗಳ ಗುರಿಯನ್ನು ನಿಗದಿಪಡಿಸಿದೆ.

ಈ ಗುರಿ ಸಾಧಿಸಲು, ಜಲಮಂಡಳಿ ಇಲಾಖೆ ನೌಕರರನ್ನು ಇತರೆ ಮುಂಚೂಣಿ ಕಾರ್ಯಕರ್ತರೊಂದಿಗೆ ಒಗ್ಗೂಡಿಸಲಾಗಿದ್ದು, ‘ಹರ್ ಘರ್ ದಸ್ತಕ್’ ಅಭಿಯಾನವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರು ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಅರ್ಹ ಜನಸಂಖ್ಯೆಯ ಶೇ.85ರಷ್ಟು ಜನರು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಇದೀಗ ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತಿದೆ. ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದಷ್ಟೇ ಲಸಿಕೆ ತೀವ್ರಗೊಳಿಸಲಾಗಿಲ್ಲ. ಆದರೆ, ಕ್ಲಸ್ಟರ್ ಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾದ ಹಿನ್ನೆಲೆಯಲ್ಲಿ ತೀವ್ರಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಲಸಿಕೆಯ ಜೊತೆಗೆ ಆರೋಗ್ಯ ಸಮೀಕ್ಷೆಯನ್ನೂ ತೀವ್ರಗೊಳಿಸಲಾಗಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ರೋಗನಿರೋಧಕ ವಿವರಗಳನ್ನು ಪರಿಶೀಲಿಸಲಾಗುತ್ತಿದೆ, ಎಲ್ಲಾ ಹಿರಿಯ ನಾಗರಿಕರು ಮತ್ತು ರೋಗಲಕ್ಷಣಗಳನ್ನು ಹೊಂದಿರುವ ಜನರ ಆರೋಗ್ಯವನ್ನು ಕೂಡ ಪರಿಶೀಲಿಸಲಾಗುತ್ತಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸುಮಾರು 900 ಗ್ರಾಮಗಳಿದ್ದು, ಅಲ್ಲಿ ವಿವರವಾದ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ಮಧ್ಯೆ ಬೆಂಗಳೂರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ನಗರದ ವಸತಿ ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಸ್ಪ್ರೇ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಮಾತನಾಡಿ, ಎರಡು ಬಾರಿ ಲಸಿಕೆ ಪಡೆದುಕೊಂಡವರಿಗೆ ಅಪಾಯ ಕಡಿಮೆ ಇದೆ ಎಂದು ಸಾಬೀತಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ಮನೆ ಮನೆಗೆ ತೆರಳಿ ತಪಾಸಣೆ ಹಾಗೂ ಆರೋಗ್ಯ ತಪಾಸಣೆಯನ್ನು ತೀವ್ರಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

SCROLL FOR NEXT