ರಾಜ್ಯ

ವಿರೋಧದ ನಡುವೆಯೂ ಆಫ್ ಲೈನ್ ನಲ್ಲಿ ಕಾನೂನು ಪದವಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

Lingaraj Badiger

ಬೆಳಗಾವಿ: ಕಾನೂನು ಪದವಿ ವಿದ್ಯಾರ್ಥಿಗಳ ತೀವ್ರ ವಿರೋಧದ ನಡುವೆಯೇ ಇಂಟರ್ ಮೀಡಿಯೆಟ್ ಮತ್ತು ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿದ್ಯಾರ್ಥಿಗಳ ತೀವ್ರ ವಿರೋಧದ ನಡುವೆಯೂ ಆಫ್‌ಲೈನ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರು ಸಹ ಆಕ್ಷೇಪ ವ್ಯಕ್ತಪಡಿಸಿದರು.

ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಅಬ್ಬಯ್ಯ, “ಆಫ್‌ಲೈನ್ ಪರೀಕ್ಷೆಗಳನ್ನು ನಡೆಸುವ ವಿಶ್ವವಿದ್ಯಾಲಯ ಮತ್ತು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಳೆದ ಒಂಬತ್ತು ದಿನಗಳಿಂದ ಸಾವಿರಾರು ಕಾನೂನು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಯೊಬ್ಬ ಅಸ್ವಸ್ಥಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

"ಆಫ್‌ಲೈನ್ ಪರೀಕ್ಷೆಗಳನ್ನು ನಡೆಸುವ ಬದಲು ವಿಶ್ವವಿದ್ಯಾಲಯವು ಇಂಟರ್ ಮೀಡಿಯೆಟ್ ವಿದ್ಯಾರ್ಥಿಗಳನ್ನು ಅವರ ಅಸೈನ್  ಮೆಂಟ್ ಅಥವಾ ಅಥವಾ ಆನ್‌ಲೈನ್ ಪರೀಕ್ಷೆ ಮೂಲಕ ಪಾಸ್ ಮಾಡಬೇಕು. ಬೆಂಗಳೂರು ಮತ್ತು ದೆಹಲಿ ಕಾನೂನು ವಿಶ್ವವಿದ್ಯಾಲಯಗಳು ಇಂಟರ್ ಮೀಡಿಯೆಟ್ ವರ್ಷದ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಿವೆ. ರಾಜ್ಯ ಸರ್ಕಾರವೂ ಅದನ್ನೇ ಅನುಸರಿಸಿ ವಿದ್ಯಾರ್ಥಿ ಸ್ನೇಹಿ ನಿರ್ಧಾರಗಳನ್ನು ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಶಾಸಕರು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು, ಪರೀಕ್ಷೆಗೆ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯಾವಕಾಶ ನೀಡಿದ್ದೇವೆ. ಅಸೈನ್ ಮೆಂಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸರ್ಕಾರ ಸಿದ್ಧವಿಲ್ಲ. ನಾವು ಸಮೀಕ್ಷೆಯನ್ನು ನಡೆಸಿದ್ದೇವೆ, 26,000 ವಿದ್ಯಾರ್ಥಿಗಳು ಆನ್‌ಲೈನ್ ಅಥವಾ ಆಫ್‌ಲೈನ್ ಪರೀಕ್ಷೆಗಳನ್ನು ಬಯಸುತ್ತಾರೆಯೇ ಎಂದು ಕೇಳಿದ್ದೇವೆ. ಅವರಲ್ಲಿ 17,000 ವಿದ್ಯಾರ್ಥಿಗಳು ಆಫ್‌ಲೈನ್ ಪರೀಕ್ಷೆಗಳಿಗೆ ಹಾಜರಾಗಲು ಅಥವಾ ತೆಗೆದುಕೊಳ್ಳಲು ಸಿದ್ಧರಾಗಿದ್ದಾರೆ. ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವ ಅಥವಾ ಅದನ್ನು ಉತ್ತೇಜಿಸುವ ಪ್ರಶ್ನೆಯೇ ಇಲ್ಲ ಮತ್ತು ಆಫ್‌ಲೈನ್ ಪರೀಕ್ಷೆಗಳು ನಡೆಯಲಿವೆ ಎಂದರು.

SCROLL FOR NEXT