ರಾಜ್ಯ

ರಾಜ್ಯದ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಸರ್ಕಾರಕ್ಕೆ ತಜ್ಞರ ಸಲಹೆ

Manjula VN

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳವನ್ನು ನಿಯಂತ್ರಿಸಲು ಅಂತರಾಜ್ಯ ಗಡಿಗಳಲ್ಲಿ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ತಪಾಸಣೆ ಮರು ಜಾರಿ ಮಾಡುವಂತೆ ತಜ್ಞರು ಹಾಗೂ ಅಧಿಕಾರಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶಿಸುವವರಿಗೆ ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಕೇರಳದಿಂದ ಬರುವವರಿಗೆ ಮಾತ್ರ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ರಾಜ್ಯದಲ್ಲಿ ದಿನ ಕಳೆದಂತೆ ಸೋಂಕು ಹೆಚ್ಚಾಗುತ್ತಿದೆ. ಈ ಕುರಿತು ಪ್ರತೀನಿತ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಲಾಗುತ್ತಿದೆ. ಈಗಾಗಲೇ ನಮ್ಮ ಸಲಹೆಗಳಿಗೆ ಇತರೆ ಅಧಿಕಾರಿಗಳು ಒಪ್ಪಿಗೆ ನೀಡಿದ್ದು, ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಅಂತರರಾಜ್ಯಗಳಿಂದ ಬಂದವರು ಎರಡು ಡೋಸ್ ಲಸಿಕೆ ಪಡೆದಿರುವ ಪ್ರಮಾಣಪತ್ರ ತರುವುದನ್ನು ಕಡ್ಡಾಯಗೊಳಿಸಬಕು. ಇದರಿಂದ ಹೆಚ್ಚೆಚ್ಚು ಜನರು ಲಸಿಕೆ ಪಡೆಯುವಂತಾಗುತ್ತದೆ. ಇದರ ಜೊತೆಗೆ ರಾಜ್ಯಕ್ಕೆ ಬರುವವರು ಹಾಗೂ ಹೊರ ಹೋಗುವವರಿಗೆ ನೆಗೆಟಿವ್ ವರದಿಯನ್ನೂ ಕಡ್ಡಾಯಗೊಳಿಸಬೇಕು.

ಅಂತರಾಷ್ಟ್ರೀಯ ಪ್ರಯಾಣದ ಹಿಸ್ಟರಿ ಇಲ್ಲದವರಿಗೂ ಓಮಿಕ್ರಾನ್ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಇದು ಸಕಾಲವಾಗಿದೆ. ನಿರ್ಬಂಧಗಳ ಹೇರುವ ಆಗತ್ಯವಿಲ್ಲ ಆದರೆ, ರಾಜ್ಯದ ಗಡಿ ಪ್ರವೇಶಿಸುವವರಿಗೆ ಪರೀಕ್ಷಾ ವರದಿ ಹಾಗೂ ಲಸಿಕೆ ಪ್ರಮಾಣಪತ್ರ ಕಡ್ಡಾಯಗೊಳಿಸುವುದು ಪ್ರಮುಖವಾಗಿದೆ ಎಂದು ತಜ್ಞರ ಸಮಿತಿ ಸದಸ್ಯರು ಹೇಳಿದ್ದಾರೆ.

SCROLL FOR NEXT