ರಾಜ್ಯ

ಮುಂದಿನ ಎರಡು ವರ್ಷಗಳಲ್ಲಿ 9 ಲಕ್ಷ ಮನೆಗಳ ನಿರ್ಮಾಣ: ಬಿ.ಎಸ್. ಯಡಿಯೂರಪ್ಪ

Shilpa D

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ ರಾಜ್ಯಾದ್ಯಂತ ಮುಂದಿನ ಎರಡು ವರ್ಷಗಳಲ್ಲಿ ಒಂಭತ್ತು ಲಕ್ಷ ಮನೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

ಈ ಪೈಕಿ ರಾಜ್ಯದ ವಸತಿ ಯೋಜನೆಗಳಡಿ ನಿರ್ಮಿಸುವ ಐದು ಲಕ್ಷ ಮನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ನಾಲ್ಕು ಲಕ್ಷ ಮನೆಗಳು ಸೇರಿವೆ. ಮನೆ ನಿರ್ಮಿಸಲು ಪರಿಶಿಷ್ಟ ಫಲಾನುಭವಿಗಳಿಗೆ 1.75 ಲಕ್ಷ ರು. ಮತ್ತು ಇತರರಿಗೆ 1.20 ಲಕ್ಷ ರು. ಸಹಾಯಧನ ದೊರೆಯುತ್ತದೆ.

ಕೇಂದ್ರದ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳಿಗೆ ಫಲಾನುಭವಿಗಳಿಗೆ ಶೇ.60 (72 ಸಾವಿರ ರು.) ಮತ್ತು ರಾಜ್ಯದ ಪಾಲು ಶೇ.40 (48 ಸಾವಿರ ರು.) ಸಹಾಯಧನ ಲಭ್ಯವಿದೆ. ಪ್ರತಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ತಲಾ 100 ಮನೆಗಳನ್ನು ಹಂಚಿಕೆ ಮಾಡಲಾಗುವುದು.

 ಮುಖ್ಯಮಂತ್ರಿಗಳ ಒಂದು ಲಕ್ಷ ಬೆಂಗಳೂರು ಬಹು ಮಹಡಿ ಯೋಜನೆಯಡಿ ಆ.15 ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಐದು ಸಾವಿರ ಮನೆಗಳ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಪ್ರಸ್ತುತ ನಿರ್ಮಾಣದ ವಿವಿಧ ಹಂತಗಳಲ್ಲಿರುವ ರಾಜ್ಯ ಸರ್ಕಾರದ ಬಸವ ವಸತಿ ಯೋಜನೆ, ಡಾ.ಬಿ.ಆರ್‌.ಅಂಬೇಡ್ಕರ್‌ ನಿವಾಸ್‌ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ವಾಜಪೇಯಿ ನಗರ ವಸತಿ ಯೋಜನೆಗಳಡಿ ಮನೆಗಳನ್ನು ಪೂರ್ಣ ಮಾಡಲು 6,200 ಕೋಟಿ ರು. ಗಳ ಅಗತ್ಯವಿದೆ. ಹಂತ ಹಂತವಾಗಿ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

SCROLL FOR NEXT