ಬೆಂಗಳೂರು: ಮನೆಗೆ ನುಗ್ಗಿ ಒಂಟಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಿರುವ ಪ್ರಕರಣವೊಂದು ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಜ್ಞಾನಜ್ಯೋತಿ ನಗರದಲ್ಲಿ ವಾಸವಿದ್ದ 26 ವರ್ಷದ ಮಹಿಳೆಯ ಹತ್ಯೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದೆ.
ಕೊಲೆಯಾದ ಮಹಿಳೆಯ ಪತಿ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದಾರೆ. ಪತಿ ಎಂದಿನಂತೆ ಶನಿವಾರ ಕೆಲಸಕ್ಕೆ ಹೋಗಿದ್ದು, ಮಹಿಳೆ ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ ಮಹಿಱೆಯ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಮಹಿಳೆಯ ಬಾಮೈದ ಸಂಜೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತ ಮಹಿಳೆಯ ಮೇಲಿನ ಚಿನ್ನಾಭರಣ ಕಳವು ಆಗಿಲ್ಲ. ಮೇಲ್ನೋಟಕ್ಕೆ ವೈಯಕ್ತಿಕ ಕಾರಣಕ್ಕೆ ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಪ್ರಕರಣ ಸಂಬಂಧ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಹಂತಕರು ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಕತ್ತು ಸೀಳಿ ನಂತರ ಚಾಕುವವನ್ನು ಮಹಿಳೆಯ ಕೈಯಲ್ಲಿ ಇಟ್ಟು ಹೋಗಿದ್ದಾರೆ. ಘಟನೆಯಲ್ಲಿ ಮನೆಯಲ್ಲಿದ್ದ ಯಾವುದೇ ಬೆಲೆ ಬಾಳುವ ವಸ್ತುಗಳ ದರೋಡೆಯಾಗಿಲ್ಲ. ತಿಳಿದ ವ್ಯಕ್ತಿಗಳೇ ವೈಯಕ್ತಿಕ ಕಾರಣಕ್ಕೆ ಹತ್ಯೆ ಮಾಡಿರುವಂತಿದೆ ಎಂದು ಪೊಲೀಸರು ಹೇಳಿದ್ದಾರೆ.