ರಾಜ್ಯ

ಎಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸುಗಳು ಕನ್ನಡದಲ್ಲಿ: ಸಚಿವ ಅಶ್ವತ್ಥ್ ನಾರಾಯಣ್

Manjula VN

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಹೇಳಿದ್ದಾರೆ. 

ಕರ್ನಾಟಕ ವಿವಿಯ ಎಲ್ಲಾ ಭಾಷಾ ವಿಭಾಗದ ಅಧ್ಯಾಪಕರ ಸಂಘದಿಂದ ಭಾನುವಾರ ಆಯೋಜಿಸಿದ್ದ ಹೊಸ ಶಿಕ್ಷಣ ನೀತಿ-ಭಾರತೀಯ ಭಾಷೆಗಳ ಅಧ್ಯಯನ ಕುರಿತ ವೆಬಿನಾಲ್ ನಲ್ಲಿ ಅಶ್ವತ್ಥ ನಾರಾಯಣ್ ಅವರು ಮಾತನಾಡಿದರು. 

ವೃತ್ತಿಪರ ಶಿಕ್ಷಣವನ್ನು ಮಾತೃಭಾಷೆಯಲ್ಲಿ ನೀಡಬೇಕು ಎಂಬುದು ಹೊಸ ಶಿಕ್ಷಣ ನೀತಿಯ ಪ್ರಮುಖ ಆಶಯವಾಗಿದೆ. ಈ ಪರಿಕಲ್ಪನೆ ಎಷ್ಟು ಚೆನ್ನಾಗಿದೆ ಎಂದರೆ ಹೊಸ ತಂತ್ರಜ್ಞಾನವನ್ನು ತಮ್ಮ ಭಾಷೆಯ ಆಧಾರದ ಮೇಲೆಯೇ ರೂಪಿಸಬಹುದು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡವನ್ನು ಬಳಸಬಹುದು. ತಂತ್ರಜ್ಞಾನ ಮತ್ತು ಆವಿಷ್ಕಾರ ಬೆಳೆದಂತೆಲ್ಲ ಅದಕ್ಕೆ ಸಮಾನಾಂತರವಾಗಿ ಕನ್ನಡವೂ ಬೆಳೆಯಬೇಕು. 

ಈ ನಿಟ್ಟಿನಲ್ಲಿ ಸರ್ಕಾರ ಕನ್ನಡದಲ್ಲಿಯೇ ವೃತ್ತಿಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಅಗತ್ಯ ಪೋತ್ಸಾಹ ನೀಡಲಿದೆ. ತಾಂತ್ರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡವನ್ನು ಹೆಚ್ಚೆಚ್ಚು ಅಳವಡಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಮಾತೃಭಾಷೆ ಕನ್ನಡಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬರುತ್ತದೆ. ಅದರ ಬಗ್ಗೆ ಯಾವ ಗೊಂದಲ, ಅನುಮಾನವೂ ಬೇಡ ಎಂದು ತಿಳಿಸಿದರು. 

ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರುತ್ತದೆ ಎಂದು ಹೇಳಿದರು.

SCROLL FOR NEXT