ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದಿದ್ದು ಆಗಸ್ಟ್ 10 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೋವಿಡ್ ಆತಂಕದ ನಡುವೆ ಪರೀಕ್ಷೆ ನಡೆಸುವ ಹಿಂದೆ ಯಾವುದೇ ದುರುದ್ದೇಶ ನಮಗಿರಲಿಲ್ಲ. ಸರ್ಕಾರ ಸದ್ದುದ್ದೇಶದಿಂದ ಸಕಲ ಮುನ್ನೆಚ್ಚರಿಕೆ ಕ್ರಮದೊಂದಿಗೆ ಪರೀಕ್ಷೆ ನಡೆಸಿದೆ. ಇಂದು ಯಶಸ್ವಿಯಾಗಿ ಪರೀಕ್ಷೆ ಮುಗಿದಿದ್ದು, ಈ ಪರೀಕ್ಷೆ ಯಶಸ್ಸಿಗೆ ಕಾರಣರಾದ ನಾಡಿನ ಎಲ್ಲಾ ಶಿಕ್ಷಕ ವೃಂದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಹಲವು ಸಂಘ ಸಂಸ್ಥೆಗಳು ನಮ್ಮ ಜೊತೆ ಕೈ ಜೋಡಿಸಿದೆ. ಎಲ್ಲಾ ಶಾಸಕರು ಶಿಕ್ಷಣ ಇಲಾಖೆ ಜೊತೆ ಸಹಕಾರದ ಜೊತೆ ಬೆಂಬಲ ನೀಡಿದ್ದು, ಅವರಿಗೆ ಧನ್ಯವಾದಗಳು ತಿಳಿಸುತ್ತೇನೆ ಎಂದರು
ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಮುಕ್ತಾಯವಾಗಿದ್ದು, ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟ ಮಾಡಲಿದ್ದೇವೆ.
ರಾಜ್ಯದಲ್ಲೆಡೆ ಮಳೆ ಅಬ್ಬರ ಮುಂದುವರೆದಿದೆ. ಈ ವರ್ಷಧಾರೆ ಸಾರಿಗೆ ಕಾರಣದಿಂದ ಯಾವುದೇ ಮಕ್ಕಳು ಗೈರು ಆಗದೇ ಶೇ 99.65ರಷ್ಟು ಹಾಜರಾತಿಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅಬ್ಬರದ ಮಳೆಯ ನಡುವೆಯೂ ಯಶಸ್ವಿಯಾಗಿ ಪರೀಕ್ಷೆ ನಡೆದಿದೆ, ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚು ಇದೆ. ಮಕ್ಕಳು ಕೂಡ ಸಂತೋಷ ಮತ್ತು ನಿರಾಳತೆಯೊಂದಿಗೆ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 152 ವಿದ್ಯಾರ್ಥಿಗಳು ಭಾಷಾ ವಿಷಯಗಳ ಪರೀಕ್ಷೆ ಬರೆದರು. 10,693 ವಲಸೆ ವಿದ್ಯಾರ್ಥಿಗಳು ತಮಗೆ ಸಮೀಪದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡಿದ್ದರು. 2,870 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿದ್ದು ಪರೀಕ್ಷೆಗೆ ಹಾಜರಾದರು. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಕೇರಳ ಮತ್ತು ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಒಟ್ಟು 706 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು’ ಎಂದರು.
ಮೂಳೆ ಸವೆತ ರೋಗದಿಂದ ಬಳಲುತ್ತಿರುವ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಕಾವೇರಿಪುರದ ಆರ್.ಎ.ಎಸ್ ಕಾನ್ವೆಂಟ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾಳೆ. ಮೊದಲ ಪರೀಕ್ಷೆ ಬರೆದು ಕಡಿಮೆ ಅಂಕಗಳು ಬರಬಹುದೆಂಬ ಭೀತಿಯಿಂದ ಅಜ್ಜಿಗೆ ತಂದಿದ್ದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲೆಯ ಕೆಂಚನಾಲಾ ಗ್ರಾಮದ ವಿದ್ಯಾರ್ಥಿನಿ ಗುರುವಾರದ ಪರೀಕ್ಷೆಗೆ ಹಾಜರಾಗಿದ್ದಾಳೆ ಎಂದು ಮಾಹಿತಿ ನೀಡಿದರು.
ದ್ವಿಚಕ್ರ ವಾಹನದಲ್ಲಿ ಅಥಣಿಯ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬೈಕ್ ಸ್ಕಿಡ್ ಆಗಿ ಅಪಘಾತಕ್ಕೀಡಾದರು. ಇಬ್ಬರು ವಿದ್ಯಾರ್ಥಿಗಳಲ್ಲಿ ಮಲ್ಲಿಕಾರ್ಜುನ್ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ, ಮತ್ತೊಬ್ಬ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದಾನೆ.