ರಾಜ್ಯ

ಕೋವಿಡ್-19 ಮೂರನೇ ಅಲೆ: ಉನ್ನತ ಮಟ್ಟದ ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

Nagaraja AB

ಬೆಂಗಳೂರು: ಕೋವಿಡ್-19 ಮೂರನೇ ಅಲೆ ತಡೆಗೆ ರಚಿಸಿರುವ ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿ ಇಂದು ಸರ್ಕಾರಕ್ಕೆ ತನ್ನ ಮಧ್ಯಂತರ ವರದಿಯನ್ನು ಸಲ್ಲಿಸಿತು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗುಲುವ ಸಾಧ್ಯತೆ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಕೆಲವೊಂದು ಶಿಫಾರಸುಗಳನ್ನು ಮಾಡಿದೆ. ಜಿಲ್ಲೆ ಮತ್ತು ತಾಲೂಕ್ ಆಸ್ಪತ್ರೆ, ವೈದ್ಯಕೀಯ ಕಾಲೇಜ್ ಆಸ್ಪತ್ರೆಗಳಲ್ಲಿ ಮಕ್ಕಳ ಹೆಚ್ .ಡಿ.ಯು ಘಟಕ, ಮಕ್ಕಳ ತೀವ್ರ ನಿಗಾ ಘಟಕ ಸ್ಥಾಪನೆ, ಮಕ್ಕಳ ಆಸ್ಪತ್ರೆ ಸ್ಥಾಪನೆ ಕುರಿತು ಸಲಹೆ ನೀಡಿದೆ ಎಂದರು.

ಮೂರನೇ ಅಲೆ ತಡೆಗಟ್ಟಲು ಮಾನವ ಸಂಪನ್ಮೂಲ, ಆರ್ಥಿಕ ಸಂಪನ್ಮೂಲ ಹಾಗೂ ಪರಿಣತರ ನೆರವು ಪಡೆಯುವ ಕುರಿತು ಸಹ ಸಮಿತಿ ಸಲಹೆ ನೀಡಿದೆ. ವಿವಿಧ ವೈದ್ಯಕೀಯ ಸಂಘಟನೆಗಳ ಸಹಯೋಗದೊಂದಿಗೆ ವೈದ್ಯರು, ದಾದಿಯರ ಕೊರತೆ ನಿವಾರಣೆ, ರಾಜ್ಯದಲ್ಲಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯುವುದು, ಕಾರ್ಪೊರೇಟ್ ಸಂಸ್ಥೆಗಳ ಸಹಕಾರದಿಂದ ಸಂಪನ್ಮೂಲಗಳ ನೆರವು ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕರ ಸಹಭಾಗಿತ್ವ ಪಡೆಯುವ ಬಗ್ಗೆ ಸಲಹೆ ನೀಡಿದೆ ಎಂದು ಹೇಳಿದರು.

ಅಪೌಷ್ಠಿಕತೆ ನಿವಾರಣೆಗೆ ಆದ್ಯತೆ ನೀಡುವಂತೆ, ಕೋವಿಡ್ ಗೆ ತುತ್ತಾದ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಪ್ರತಿ ಆಸ್ಪತ್ರೆಯಲ್ಲಿ ಮನೋವೈದ್ಯರ ಸೇವೆ ಒದಗಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಸಮಿತಿ, ಆಮ್ಲಜನಕ ಕೊರತೆ ನಿವಾರಣೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಲಹೆ ನೀಡಿದೆ. 

ಕೋವಿಡ್ ನಂತರ ತಲೆದೋರುವ ಆರೋಗ್ಯ ಸಮಸ್ಯೆಗಳ ಕುರಿತು ಎಚ್ಚರ ವಹಿಸುವ ಕುರಿತು ಹಾಗೂ ಕೋವಿಡ್ ಅಲ್ಲದೆ ಇತರ ಆರೋಗ್ಯ ಸಮಸ್ಯೆಗಳಿಗೂ ಆದ್ಯತೆ ನೀಡುವ ಅಗತ್ಯವಿದೆ. ಕೋವಿಡ್ ನಿಯಂತ್ರಣಕ್ಕೆ ಲಸಿಕೆ ಅತ್ಯಂತ ಸೂಕ್ತ ಪರಿಹಾರವಾಗಿದ್ದು, ಲಸಿಕೆ ಅಭಿಯಾನವನ್ನು ಇನ್ನಷ್ಟು ತೀವ್ರಗೊಳಿಸುವಂತೆ ಸಮಿತಿ ಸಲಹೆ ನೀಡಿದೆ ಎಂದರು.

ಶಾಲಾ, ಕಾಲೇಜುಗಳನ್ನು ಹಂತ ಹಂತವಾಗಿ ತೆರೆಯುವ ಬಗ್ಗೆ ಚಿಂತನೆ ನಡೆಸಲು ಸಮಿತಿ ಸಲಹೆ ನೀಡಿದೆ. 18 ವಯಸ್ಸಿನ ಮೇಲಿನ ಮಕ್ಕಳಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಿ ಕಾಲೇಜುಗಳನ್ನು ಪ್ರಾರಂಭಿಸುವ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

SCROLL FOR NEXT