ರಾಜ್ಯ

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮೃತದೇಹ ಕುಟುಂಬಕ್ಕೆ ಹಸ್ತಾಂತರ: ಶಂಕಿತರ ವಿಚಾರಣೆ

Sumana Upadhyaya

ಬೆಂಗಳೂರು: ಬಿಬಿಎಂಪಿಯ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವಿಧಿವಿಧಾನ ಮುಗಿದ ಬಳಿಕ ಅವರ ಕುಟುಂಬಸ್ಥರಿಗೆ ಶುಕ್ರವಾರ ಬೆಳಗ್ಗೆ ಮೃತದೇಹ ಹಸ್ತಾಂತರಿಸಲಾಗಿದೆ.

ಹತ್ಯೆ ಪ್ರಕರಣ ಸಂಬಂಧ ಇದುವರೆಗೆ ನಾಲ್ವರು ಶಂಕಿತರನ್ನು ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ಸಂಚು ಮತ್ತು ಸಹಕಾರ ರೂಪಿಸಿದ ಶಂಕೆ ಮೇಲೆ ವಶಕ್ಕೆ ಪಡೆಯಲಾಗಿದೆ.

ರೇಖಾ ಕದಿರೇಶ್ ಅವರ ಅಂತಿಮ ದರ್ಶನ ಪಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇಖಾ ಕದಿರೇಶ್ ಅವರು ಬಿಜೆಪಿಯಲ್ಲಿದ್ದುಕೊಂಡು ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದರು. ಛಲವಾದಿಪಾಳ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರ ಹತ್ಯೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ ಸೂಕ್ತ ಕ್ರಮ ಕೈಗೊಂಡು ಶಿಕ್ಷೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು ಸಂಸದ ಪಿ ಸಿ ಮೋಹನ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು. ಕದಿರೇಶ್ ನನ್ನು ರಾಜಕೀಯ ದ್ವೇಷಕ್ಕೆ ಕೊಲೆ ಮಾಡಿದ್ದರು. ಇದೀಗ ಅವರ ಪತ್ನಿಯನ್ನು ಕೂಡ ಹತ್ಯೆ ಮಾಡಲಾಗಿದೆ, ಇದು ಬಹಳ ದುಃಖಕರ ಸಂಗತಿ.ರೇಖಾ ಕದಿರೇಶ್ ಸಾಕಷ್ಟು ಸಮಾಜ ಸೇವೆ ಮಾಡುತ್ತಿದ್ದರು. ಕೋವಿಡ್ ಸಂಕಷ್ಟ ಸಮಯದಲ್ಲಿ ಸಾಕಷ್ಟು ಬಡವರಿಗೆ ಸಹಾಯ ಮಾಡಿದ್ದಾರೆ. ಇಂತಹ ಘಟನೆ ಮರುಕಳಿಸಬಾರದು, ತಪ್ಪಿತಸ್ಥರ ವಿರುದ್ಧ ಆದಷ್ಟು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. 

ಇನ್ನು ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನ ಬಿಜೆಪಿ ಕಚೇರಿ ಮುಂಭಾಗದಲ್ಲಿ ರೇಖಾ ಕದಿರೇಶ್ ಅವರ ಪಾರ್ಥಿವ ಶರೀರವನ್ನು ಇಡಲಾಗುತ್ತಿದ್ದು ಅಂತಿಮ ದರ್ಶನ ಪಡೆಯಲು ಸಿದ್ಧತೆ ಮಾಡಲಾಗುತ್ತಿದೆ. ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಸೀಮಿತ ಜನರಿಗೆ ಮಾತ್ರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇನ್ನು ಮೂರರಿಂದ ನಾಲ್ಕು ಗಂಟೆಗಳ ಕಾಲ ಅಂತಿಮ ದರ್ಶನಕ್ಕೆ ಇಟ್ಟು ನಂತರ ಅಂತ್ಯಕ್ರಿಯೆಗೆ ತೆಗೆದುಕೊಂಡು ಹೋಗಲಾಗುತ್ತದೆ.

ಇನ್ನು ಹತ್ಯೆ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಪೀಟರ್ ಮತ್ತು ಸೂರ್ಯ ಎಂಬುವವರು ತಲೆಮರೆಸಿಕೊಂಡಿದ್ದಾರೆ.

SCROLL FOR NEXT