ರಾಜ್ಯ

ಸಫಾರಿಗೆ ಬರುವ ಜನರಿಗೆ ಕೋವಿಡ್ ಲಸಿಕಾ ಪ್ರಮಾಣಪತ್ರ ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಸಫಾರಿಗಳನ್ನು ಪುನರಾರಂಭಿಸಲು ಚಿಂತನೆಗಳು ನಡೆಯುತ್ತಿದ್ದು, ಈ ವೇಳೆ ಕೊರೋನಾ ನಿಯಮಗಳ ಪಾಲನೆ ಜೊತೆಗೆ ಕೋವಿಡ್ ಲಸಿಕಾ ಪ್ರಮಾಣಪತ್ರವನ್ನೂ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಫಾರಿಗಳ ಪುನರಾರಂಭಕ್ಕೆ ಅರಣ್ಯ ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ. 

ಈಗಾಗಲೇ ಕಾಳಿ ಹುಲಿ ಸಂರಕ್ಷಿತಾರಣ್ಯ ಪ್ರದೇಶ ಹಾಗೂ ಮಲ್ಲೆ ಮಹದೇಶ್ವರ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ, ಆದರೆ, ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳು ಕೊಡಗು, ಚಾಮರಾಜನಗರ ಮತ್ತು ಮೈಸೂರು ವಿಭಾಗಕ್ಕೆ ಬರುವುದರಿಂದ ಈ ಪ್ರದೇಶದಲ್ಲಿ ಲಾಕ್ಡೌನ್ ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಇನ್ನೂ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. 

ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವವರು, ನಮ್ಮ ಸಿಬ್ಬಂದಿಗಳು ಹಾಗೂ ಅವರ ಕುಟುಂಬ ಸದಸ್ಯರನ್ನು ಅಪಾಯಕ್ಕೆ ಸಿಲುಕುವಂತೆ ಮಾಡುವುದು ನಮಗೆ ಇಷ್ಟವಿಲ್ಲ. ಈಗಾಗಲೇ ಸಾಕಷ್ಟು ಅನುಭವಗಳಾಗಿವೆ. ಪ್ರವಾಸೋದ್ಯಮ ಇಲಾಖೆ ಅನುಮತಿ ನೀಡಿದ ಕೂಡಲೇ ಸಫಾರಿಗೆ ಬರುವ ಜನರ ಸಂಖ್ಯೆ ಹೆಚ್ಚಾಗುತ್ತದೆ. ಈ ವೇಳೆ ಪರಿಸ್ಥಿತಿ ನಿಭಾಯಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸುತ್ತದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. 

ಕೋವಿಡ್ ನಿಯಮಗಳಿಗೆ ಅನುಗುಣವಾಗಿ ಸಫಾರಿಗಳನ್ನು ವಿಭಾಗವಾರು ತೆರೆಯಲಾಗುತ್ತದೆ ಎಂದು ವನ್ಯಜೀವಿಗಳ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಲ್ಖಡೆ ಸ್ಪಷ್ಟಪಡಿಸಿದ್ದಾರೆ.

ಭದ್ರಾ ಮತ್ತು ಬಿಆರ್‌ಟಿಯಲ್ಲಿ ಜಿಲ್ಲಾಡಳಿತ ಮತ್ತು ಮುಖ್ಯ ವನ್ಯಜೀವಿ ವಾರ್ಡನ್‌ಗಳ ಅಂತಿಮ ಅನುಮತಿಗಾಗಿ ಸಿಬ್ಬಂದಿ ಕಾಯುತ್ತಿದ್ದು, ಕಾಳಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಗುರುವಾರ ಸಫಾರಿ ಮತ್ತು ಅರಣ್ಯ ಅತಿಥಿ ಗೃಹಗಳನ್ನು ಈಗಾಗಲೇ ತೆರೆಯಲಾಗಿದೆ.

SCROLL FOR NEXT