ಬೆಂಗಳೂರು: ರಾಜ್ಯದಲ್ಲಿ ಮೂರನೇ ಕೋವಿಡ್ -19 ಅಲೆ ಸಂಭವಿಸುವ ಸಾಧ್ಯತೆ ಇದೆ ಎಂದು ತಜ್ಞರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಳ್ಳಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸೂಚಿಸಿದ್ದಾರೆ.
ಎರಡನೇ ಅಲೆಯನ್ನು ನಿಯಂತ್ರಣ ಮಾಡಿದ ಮಾದರಿಯಲ್ಲೇ ಮೂರನೇ ಅಲೆ ನಿಯಂತ್ರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿಶೇಷವಾಗಿ 3ಟಿ (ಪರೀಕ್ಷೆ, ಪತ್ತೆ ಹಚ್ಚುವುದು ಮತ್ತು ಚಿಕಿತ್ಸೆ) ಸೂತ್ರವನ್ನು ಪಾಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಈ ಬಾರಿ ಜಿಲ್ಲೆಯಲ್ಲಿ ಆಧುನಿಕ ತಂತ್ರಜ್ಞಾನ ಮತ್ತು ಡಿಜಿಟಲೀಕರಣಕ್ಕೆ ವಿಶೇಷ ಒತ್ತು ಕೊಟ್ಟು ಕೋವಿಡ್ ಸೋಂಕು ನಿಯಂತ್ರಿಸಬೇಕು ಹಾಗೂ ಹೋಬಳಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಅಭಿಯಾನದ ಶಿಬಿರಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ಸೂಚಿಸಿದ್ದಾರೆ.