ರಾಜ್ಯ

ಬೆಡ್ ಬ್ಲಾಕಿಂಗ್ ಹಗರಣ: 'ಐಎಎಸ್ ಅಧಿಕಾರಿ ವಿ ಯಶವಂತ್ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಿ'

Srinivasamurthy VN

ಬೆಂಗಳೂರು: ಬಿಬಿಎಂಪಿ ವಾರ್ ರೂಂನಲ್ಲಿ ಅಧಿಕಾರಿಗಳ ಕಾರ್ಯಕ್ಕೆ ಅಡ್ಡ ಬಂದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಭಾರತೀಯ ಆಡಳಿತ ಸೇವಾ ಅಧಿಕಾರಿಗಳ ಸಂಘ ಕರ್ನಾಟಕ ಒತ್ತಾಯಿಸಿದೆ.

ಈ ಹಿಂದೆ ಸಂಸದ ತೇಜಸ್ವಿ ಸೂರ್ಯ ಅವರು ಬಯಲಿಗೆಳೆದಿದ್ದ ಬೆಡ್ ಬ್ಲಾಕಿಂಗ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ವಾರ್ ರೂಂಗೆ ಭೇಟಿ ನೀಡಿದ್ದ ವೇಳೆ ವಾಗ್ವಾದ ನಡೆದಿತ್ತು. ಈ ವೇಳೆ ವಾರ್ ರೂಂನ ಜವಾಬ್ದಾರಿ ಹೊತ್ತುಕೊಂಡಿದ್ದ ಐಎಎಸ್ ಅಧಿಕಾರಿ ವಿ.ಯಶವಂತ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಮುಂದಾಗಿದ್ದರು ಎಂದು ಆರೋಪಿಸಲಾಗಿದೆ. ಐಎಎಸ್ ಅಧಿಕಾರಿಯ ಮೇಲೆ ದೌರ್ಜನ್ಯವಾಗಿದ್ದು ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಕರ್ನಾಟಕ ಸರ್ಕಾರ ಕೂಡ ಕ್ರಮ ಜರುಗಿಸಿ ಎಫ್ಐಆರ್ ದಾಖಲಿಸಬೇಕು ಎಂದು ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಆಗ್ರಹಿಸಿದೆ.

ಈ ಕುರಿತಂತೆ ಸಂಘ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಕೂಡ ಬರೆದಿದ್ದು, 'ಕೊರೋನಾದ ಸಂಕಷ್ಟ ಸಮಯದಲ್ಲಿ ಐಎಎಸ್ ಅಧಿಕಾರಿಗಳು ವಾರಿಯರ್ಸ್ ಆಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅನೇಕ ಒತ್ತಡಗಳನ್ನು ತಾಳಿಕೊಂಡಿದ್ದಾರೆ. ಕರ್ತವ್ಯಕ್ಕೆ ಅಡ್ಡಿ ಮಾಡುವುದು ಎಷ್ಟು ಸರಿ? ಎಂದು ಸಂಘ ಪ್ರಶ್ನೆ ಮಾಡಿದೆ.ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಸಂಘ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದೆ.

SCROLL FOR NEXT