ರಾಜ್ಯ

ನಾಳೆಯಿಂದಲೇ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ: ಸಚಿವ ಸುಧಾಕರ್

Raghavendra Adiga

ಬೆಂಗಳೂರು: ನಾಳೆ (ಮೇ 10)ರಿಂದಲೇ ರಾಜ್ಯದಲ್ಲಿ  18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಸಿಕ್ಕಲಿದೆ. ಆದರೆ ಯುವಕರು  ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

"ಸೋಮವಾರ, ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು. 

"ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು.

"18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ.

"ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರಲ್ಲಿ, ಅದರಲ್ಲೂ ವಿಶೇಷವಾಗಿ ನನ್ನ ಯುವ ಮಿತ್ರರಲ್ಲಿ ನನ್ನ ಮನವಿ, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ." ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

SCROLL FOR NEXT