ರಾಜ್ಯ

ಪಾರದರ್ಶಕತೆ ಕಾಯ್ದುಕೊಳ್ಳಲು ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ: ಸಚಿವ ಸುಧಾಕರ್

Manjula VN

ಬೆಂಗಳೂರು: ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ಹೇಳಿದ್ದಾರೆ.

ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಂಕಿತರ ಸಂಬಂಧಿಕರು ಕೋವಿಡ್ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸುವಂತೆ ಆಗ್ರಹಿಸುತ್ತಿದ್ದಾರೆ. ಹೀಗಾಗಿ ಪಾರದರ್ಶಕತೆಗಾಗಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಯ ವಾರ್ಡ್‌ಗಳು ಮತ್ತು ಐಸಿಯುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 

ಕೆಲವು ಕಡೆ ಸಿಸಿಟಿವಿ ಅಳವಡಿಕೆ ಇನ್ನೂ ಅನುಷ್ಠಾನವಾಗಿರಲಿಲ್ಲ. ಈಗ ಅಲ್ಲೆಲ್ಲ ಸಿಸಿಟಿವಿ ಅಳವಡಿಸುವಂತೆ ಸೂಚಿಸಿದ್ದೇವೆ. ಇದರಿಂದ ಸೋಂಕಿತರ ಚಿಕಿತ್ಸೆಯನ್ನು ಸಂಬಂಧಿಕರು ನೋಡಬಹುದು. ವಾರ್ಡ್ ಗಳ ಒಳಗೆ ಹೊರಗಿನವರು ಅನಗತ್ಯವಾಗಿ ಓಡಾಡುವುದನ್ನು ಇದರಿಂದ ತಪ್ಪಿಸಬಹುದು ಹಾಗೂ ವೈದ್ಯಕೀಯ ಸಿಬ್ಬಂದಿಗಳೂ ಕೂಡ ನಿರಾತಂಕದಿಂದ ತಮ್ಮ ಕರ್ತವ್ಯವನ್ನು ಮುಂದುವರೆಸಬಹುದಾಗಿದೆ. ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಿರುವುದರಿಂದ ಒಳಗಿನ ಪರಿಸ್ಥಿತಿಯನ್ನು ಹೊರಗಿನಿಂದಲೇ ಕುಳಿತು ನೋಡಬಹುದಾಗಿದೆ. ಹೀಗಾಗಿ ಸಂಬಂಧಿಕರನ್ನು ಒಳಗೆ ಬಿಡದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 

ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಕೆಲವೆಡೆ ಹಲ್ಲೆ ನಡೆಯುತ್ತಿರುವುದು ಬೆಳಕಿಗೆ ಬರುತ್ತಿದೆ. ಹೀಗಾಗಿ ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸಿಸಿಟಿವಿ ಅಳವಡಿಕೆ ಅತ್ಯಗತ್ಯವಾಗಿದೆ ಎಂದಿದ್ದಾರೆ. 

SCROLL FOR NEXT