ಬೆಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡು ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವಿವರಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿರುವ ಪಿಐಎಲ್ ಸಿ.ಜೆ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು. ಮೂಲ ಅರ್ಜಿಗೆ ಮೆಮೋ ಸಲ್ಲಿಸಿರುವ ವಕೀಲ ಜಿ.ಆರ್. ಮೋಹನ್, ಮೇ 18ರಂದು ವಿಜಯೇಂದ್ರ ಕುಟುಂಬ ಸಮೇತರಾಗಿ ನಂಜನಗೂಡು ನಂಜುಂಡೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ನಡೆಸಿದ ವಿಚಾರವನ್ನು ಗಮನಕ್ಕೆ ತಂದರು.
ಮೆಮೋ ಪರಿಶೀಲಿಸಿದ ನ್ಯಾಯಪೀಠ, ಒಬ್ಬ ವ್ಯಕ್ತಿಯ ಅನುಕೂಲಕ್ಕಾಗಿ ದೇವಾಲಯ ತೆರೆದು ಪೂಜೆ ನೆರವೇರಿಸಲಾಗಿದ್ದು, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಆದ್ದರಿಂದ ಈ ವಿಚಾರದಲ್ಲಿ ಕೈಗೊಂಡ ಕ್ರಮಗಳ ಕುರಿತು ಜೂ.3ರೊಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತು.
ಕೇವಲ ಅರ್ಚಕರು ಮಾತ್ರ ದೇವಾಲಕ್ಕೆ ತೆರಳಿ ಪೂಜೆ ಸಲ್ಲಿಸಲು ಅವಕಾಶವಿದೆ, ಹೀಗಿರುವಾಗ ವಿಜಯೇಂದ್ರ ದಂಪತಿ ಹೇಗೆ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿದರು ಎಂದು ವಕೀಲರು ಪ್ರಶ್ನಿಸಿದ್ದಾರೆ.