ರಾಜ್ಯ

ಪುನೀತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿ

Nagaraja AB

ಬೆಂಗಳೂರು: ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮುಂದೆ ನಡೆಯಬೇಕಾದ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.  

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಡಾ. ಅಶ್ವತ್ಥ ನಾರಾಯಣ, ರಾಘವೇಂದ್ರ ರಾಜ್ ಕುಮಾರ್, ಚನ್ನೇಗೌಡ, ಎಸ್.ಎ. ಗೋವಿಂದ ರಾಜ್ ಮತ್ತಿತರರು ಉಪಸ್ಥಿತರಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಟ ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡು  8 ದಿನಗಳು ಆಯ್ತು. ಇಂದು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದಿವಿ. ಮುಂದೆ ಆಗಬೇಕಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಕುಟುಂಬ ಸದಸ್ಯರು ಕುಳಿತು ಚರ್ಚೆ ಮಾಡಿ, ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿರುವುದಾಗಿ ತಿಳಿಸಿದರು.

ನವೆಂಬರ್ 16ಕ್ಕೆ ಫಿಲ್ಮ್ ಚೇಂಬರ್ ನವರು ಒಂದು ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ಸರ್ಕಾರದಿಂದ ಭದ್ರತೆ ಸೇರಿದಂತೆ ಅಗತ್ಯ ಸಹಕಾರ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

SCROLL FOR NEXT