ರಾಜ್ಯ

ಹೂಡಿಕೆದಾರರ ಆಕರ್ಷಿಸಲು ನೀತಿಗಳ ಬದಲಿಸಿ: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ

Manjula VN

ಬೆಂಗಳೂರು: ವಿವಿಧ ಯೋಜನೆಗಳಿಗೆ ಅಗತ್ಯವಿರುವ ಅರಣ್ಯ ಮತ್ತು ಪರಿಸರ ಅನುಮತಿಗಳ ಬಗ್ಗೆ ಸ್ಪಷ್ಟ ನೀತಿಯನ್ನು ಹೊರತರಲು ಪಾರದರ್ಶಕ ಕಾರ್ಯವಿಧಾನವನ್ನು ರೂಪಿಸಲು ಕೇಂದ್ರ ಸರ್ಕಾರ ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಮನವಿ ಮಾಡಿದ್ದಾರೆ.

ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫೆರೆನ್ಸ್ ನಡೆಸಿ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ಬೊಮ್ಮಾಯಿಯವರು, ಎಲೆಕ್ಟ್ರಿಕ್ ವಾಹನಗಳು ಮತ್ತು ವೈದ್ಯಕೀಯ ತಂತ್ರಜ್ಞಾನದಂತಹ ಹೊಸ ವ್ಯವಹಾರಗಳಿಗೆ ಹಣಕಾಸು ಒದಗಿಸಲು ಕೇಂದ್ರವು ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಂಡರು. ಅಲ್ಲದೆ ವಿವಾದಗಳ ತ್ವರಿತವಾಗಿ ಪರಿಹರಿಸಲು ಕಾರ್ಯವಿಧಾನವನ್ನು ರೂಪಿಸುವಂತೆ ಸಲಹೆ ನೀಡಿದರು.

ಕರಾವಳಿ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕರಾವಳಿ ನಿಯಂತ್ರಣ ವಲಯದ ಅಡಿಯಲ್ಲಿ ನಿರ್ಬಂಧಗಳನ್ನು ಸಡಿಲಿಸಬೇಕು. ಅದಿರು ಸಾಗಾಣಿಕೆ ವೇಳೆ ಹಾನಿಯಾಗಿರುವ ರಸ್ತೆ ಸೇರಿದಂತೆ ಮೂಲಸೌಕರ್ಯಗಳನ್ನು ಸರಿಪಡಿಸಲು ಜಿಲ್ಲಾ ಗಣಿಗಾರಿಕೆ ನಿಧಿಯ ಒಂದು ಭಾಗವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕೆಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕದ ಹೊರತಾಗಿಯೂ, ರಾಜ್ಯದಲ್ಲಿ ಕಳೆದ ವರ್ಷ ಅತಿ ಹೆಚ್ಚು ವಿದೇಶಿ ಹೂಡಿಕೆಗಳಾಗಿದ್ದವು. ಹೂಡಿಕೆ ಆಕರ್ಷಿಸುವ ಕುರಿತು ನಮ್ಮ ಪರಿಶ್ರಮ ಎಂದಿನಂತೆ ಮುಂದುವರೆದಿದ್ದವು. ಈಗಲೂ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವುದನ್ನು ಮುಂದುವರಿಸಿದ್ದೇವೆ ಮತ್ತು ಹೂಡಿಕೆಗಳನ್ನು ಆಕರ್ಷಿಸಲು ಕ್ರಮಗಳನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದ ಅವರು, ಭೂಸುಧಾರಣಾ ಕಾಯ್ದೆ ಮತ್ತು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿಗಳ ವಿವರಗಳನ್ನು ನೀಡಿದರು.

ರಾಜ್ಯವು ಸಂಶೋಧನೆ ಮತ್ತು ಅಭಿವೃದ್ಧಿ ವಲಯದಲ್ಲಿ ದೊಡ್ಡ ಸಾಧನೆಯನ್ನು ಮಾಡಿದೆ. ರಾಜ್ಯಕ್ಕೆ ಹೂಡಿಕೆಗಳನ್ನು ಮತ್ತಷ್ಟು ಸೆಳೆಯಲು, 2022 ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಬೀದರ್ ಮತ್ತು ಕಲಬುರಗಿಯಲ್ಲಿ ಸಣ್ಣ ವಿಮಾನ ನಿಲ್ದಾಣಗಳು ಕಾರ್ಯಾಚರಿಸುತ್ತಿದ್ದು, ಶಿವಮೊಗ್ಗ, ರಾಯಚೂರು, ವಿಜಯಪುರ ಮತ್ತು ಕಾರವಾರದ ಇತರೆ ವಿಮಾನ ನಿಲ್ದಾಣಗಳು ಮುಂದಿನ ವರ್ಷದ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.

SCROLL FOR NEXT