ರಾಜ್ಯ

'ಒಮಿಕ್ರಾನ್' ಕಟ್ಟೆಚ್ಚರ: ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯ ಕೋವಿಡ್ ಟೆಸ್ಟ್ ನಿಯಮ ಹೊರಡಿಸಿದ ಚಿತ್ರದುರ್ಗ ಜಿಲ್ಲಾಧಿಕಾರಿ

Sumana Upadhyaya

ಚಿತ್ರದುರ್ಗ: ಕೋವಿಡ್-19 ಸೋಂಕಿಗೆ ಇತ್ತೀಚೆಗೆ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳು ಒಳಗಾಗುತ್ತಿರುವುದರಿಂದ ಚಿತ್ರದುರ್ಗದಲ್ಲಿ ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೊಳಪಡಿಸುವಂತೆ ಚಿತ್ರದುರ್ಗ ಜಿಲ್ಲಾಡಳಿತ ಸೂಚಿಸಿದೆ. ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆಯನ್ನು ಕಡ್ಡಾಯ ಮಾಡಲಾಗಿದೆ. 

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮಣ್ಣಿಕೇರಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾವು ತೀವ್ರ ಕಟ್ಟೆಚ್ಚರ ವಹಿಸಿದ್ದೇವೆ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ನರ್ಸಿಂಗ್ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೊಳಪಡಿಸುವಂತೆ ಕೇರಳದಿಂದ ಬರುವ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದರೆ ಅಗತ್ಯ ವಿಧಾನಗಳನ್ನು ಪೂರೈಸಿದರೆ ಮಾತ್ರ ಅವರು ಇಲ್ಲಿ ಅಧ್ಯಯನವನ್ನು ಮುಂದುವರಿಸಬಹುದಾಗಿದೆ ಎಂದು ನಿಯಮ ಹೊರಡಿಸಿದ್ದೇವೆ ಎಂದರು.

ಕೋವಿಡ್ ಸೋಂಕಿನ ಗುಣಲಕ್ಷಣಗಳು ಕಂಡುಬಂದರೆ ಕಾಲೇಜು ಅಧಿಕಾರಿಗಳು ಅಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿರಿಸಿ ಸರಿಯಾದ ಚಿಕಿತ್ಸೆ ನೀಡಲಾಗುವುದು, ಆಗ ಹರಡುವುದನ್ನು ತಡೆಗಟ್ಟಬಹುದು. ಜಿಲ್ಲಾ ಮಟ್ಟದ ಕಾರ್ಯಪಡೆಯ ಸಭೆಯನ್ನು ಇಂದು ನಡೆಸಲಾಗುತ್ತಿದ್ದು ಒಮಿಕ್ರಾನ್ ಹೊಸ ರೂಪಾಂತರಿ ಬಗ್ಗೆ ಚರ್ಚೆ ನಡೆಸಿ ಅದು ಹರಡದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಸ್ಥಿತಿಗತಿಯನ್ನು, ಔಷಧಿಗಳ ಸಂಗ್ರಹ ಮತ್ತು ಮುಂದಿನ ದಿನಗಳಲ್ಲಿ ಯಾವುದೇ ತೊಂದರೆಯಾಗದಂತೆ ಏನು ಕ್ರಮಗಳನ್ನು ಕೈಗೊಳ್ಳಬೇಕೆಂದು ಸಹ ಚರ್ಚಿಸುತ್ತೇವೆ ಎಂದರು.

ರಾಜ್ಯದ ಗಡಿಭಾಗಗಳಲ್ಲಿ ಕಣ್ಗಾವಲನ್ನು ಬಿಗಿಗೊಳಿಸಲಾಗುವುದು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ನಿಗದಿತವಾಗಿ ಕೈಯನ್ನು ಸ್ಯಾನಿಟೈಸ್ ಮಾಡಿಕೊಳ್ಳುವುದು ಇತ್ಯಾದಿ ಕ್ರಮಗಳನ್ನು ಅನುಸರಿಸಬೇಕೆಂದು ಸಹ ಜಿಲ್ಲಾಧಿಕಾರಿ ಕವಿತಾ ಮಣ್ಣಿಕೇರಿ ಹೇಳಿದ್ದಾರೆ.

SCROLL FOR NEXT