ರಾಜ್ಯ

ಶಾಸಕರ ಮನೆ ಮೇಲೆ ಕಲ್ಲು ಎಸೆದ ಕಿಡಿಗೇಡಿಗಳು; ಸಿಸಿಟಿವಿಯಲ್ಲಿ ದೃಶ್ಯ ಸೆರೆ: ಇದು ರಾಜಕೀಯ ಪ್ರೇರಿತವಲ್ಲವೆಂದ ಪುಟ್ಟರಾಜು!

Vishwanath S

ಮಂಡ್ಯ: ಶಾಸಕರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿರುವ ಘಟನೆ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.

ಗುರುವಾರ ಮಧ್ಯರಾತ್ರಿ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಅವರ ಮನೆ ಮೇಲೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕಿಡಿಗೇಡಿಗಳು ಕಲ್ಲು ಎಸೆದು ಪರಾರಿದ್ದಾರೆ. ಘಟನೆಯಲ್ಲಿ ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಮೂರು ಕಾರುಗಳು ಜಖಂಗೊಂಡಿದೆ.

ಅಲ್ಲದೇ, ಮೂರು ಕಾರು, ಒಂದು ಖಾಸಗಿ ಬಸ್, ಹೋಂಡಾ ಶೋರೂಂ ಮೇಲೆ ಕಲ್ಲು ಎಸೆದು ಪರಾರಿಯಾಗಿದ್ದಾರೆ. ಕಿಡಿಗೇಡಿಗಳ ಕೃತ್ಯ ಸಂಪೂರ್ಣವಾಗಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪಾಂಡವಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮೇಲೆ ಕಲ್ಲು ತೂರಾಟ ನಡೆಸಿರುವುದು ರಾಜಕೀಯ ಪ್ರೇರಿತವಲ್ಲ: ಸಿ.ಎಸ್ ಪುಟ್ಟರಾಜು
ನಮ್ಮ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವುದು ರಾಜಕೀಯ ಪ್ರೇರಿತವಲ್ಲ. ಬದಲಾಗಿ ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್ ಪುಟ್ಟರಾಜು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಾಸಕರು, ಕಳೆದ ರಾತ್ರಿ ಪಾಂಡವಪುರ ಪಟ್ಟಣದಲ್ಲಿ ಯಾರೋ ಕಿಡಿಗೇಡಿಗಳು ಬಸ್, ಕಾರು, ಮೊಬೈಲ್ ಅಂಗಡಿ ಸೇರಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ನಮ್ಮ ಮನೆ ಮೇಲೂ ಕಲ್ಲು ತೂರಿದ್ದಾರೆ. 

ಇದೊಂದು ರಾಜಕೀಯ ಪ್ರೇರಿತವಲ್ಲ. ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯವಾಗಿದೆ. ಇದಕ್ಕೂ ಮೊದಲು ಕಿಡಿಗೇಡಿಗಳು ಪೆಟ್ರೋಲ್ ಬಂಕ್ ವೊಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. 

ಆದ್ದರಿಂದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಯಾವುದೇ ಆತಂಕಪಡದೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಪಾಂಡವಪುರ ಪಟ್ಟಣದಲ್ಲಿ ಗುರುವಾರ ಮಧ್ಯರಾತ್ರಿ ಕಿಡಿಗೇಡಿಗಳು ಶಾಸಕ ಪುಟ್ಟರಾಜು ಮನೆ ಸೇರಿ ಹಲವು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪಾಂಡವಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT