ರಾಜ್ಯ

ಮೈಶುಗರ್ ಕಾರ್ಖಾನೆಯನ್ನು 2 ವರ್ಷ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನ: ಸಿಎಂ ನಿರ್ಧಾರಕ್ಕೆ ರೈತರ ಹರ್ಷ

Shilpa D

ಬೆಂಗಳೂರು: ನಷ್ಟದಲ್ಲಿರುವ ಮೈಸೂರಿನ ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ವಿಧಾನಸೌಧದಲ್ಲಿ ಸೋಮವಾರ ಮಂಡ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗದ ಜೊತೆ ನಡೆಸಿದ ಸಭೆಯಲ್ಲಿ ಎರಡು ವರ್ಷಗಳ ಕಾಲ ಮೈಷುಗರ್ ಕಾರ್ಖಾನೆಯನ್ನು ಸರ್ಕಾರ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು. 

ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಮೂರು ತಿಂಗಳಲ್ಲಿ ಮೈಷುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಕಬ್ಬಿನ ಉಪ ಉತ್ಪನ್ನಗಳನ್ನು ತಯಾರಿಸಲು ಆದ್ಯತೆ ನೀಡಲಾಗುತ್ತದೆ. ಕೂಡಲೆ ದಕ್ಷ ಅಧಿಕಾರಿಯನ್ನು ಎಂಡಿಯಾಗಿ ನೇಮಕ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಸರಿಪಡಿಸಲು ಈಗಿನಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಮೈಷುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ಸದ್ಯಕ್ಕೆ ವಾಪಸ್ ಪಡೆಯುತ್ತೇವೆ. ಅಷ್ಟೇ ಅಲ್ಲದೆ ಕಾರ್ಖಾನೆಗೆ ಅಗತ್ಯ ಹಣಕಾಸು ನೆರವು ನೀಡಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆಯ ವ್ಯಾಪ್ತಿಯ ಕಬ್ಬನ್ನು ಖರೀದಿಸಿ ಬೇರೆ ಸಕ್ಕರೆ ಕಾರ್ಖಾನೆಗಳಿಗೆ ರವಾನಿಸಲು ನಿರ್ಧರಿಸಲಾಗಿದೆ. 2022ರಿಂದ ಪೂರ್ಣ ಪ್ರಮಾಣದಲ್ಲಿ ಕಬ್ಬು ಅರೆಯಲು ಸಿದ್ಧತೆ ಆರಂಭಿಸುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಆಡಳಿತ ನಿರ್ವಹಣೆ ಮತ್ತು ತಾಂತ್ರಿಕ ಸುಧಾರಣೆ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿ ನೇಮಿಸಲಾಗುವುದು. ಸಮಿತಿಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದರು.

ಮೈ ಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸುವ ಪ್ರಸ್ತಾವವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ. ಎರಡು ವರ್ಷಗಳ ಕಾಲ ಸರ್ಕಾರದ ನಿರ್ವಹಣೆಯಲ್ಲಿ ದೊರೆಯುವ ಫಲಿತಾಂಶ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರೈತರಿಗೆ ತೊಂದರೆ ಆಗಬಾರದು ಎಂಬ ಸದುದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕಾರ್ಖಾನೆ ಆರಂಭಕ್ಕೆ ತಕ್ಷಣದಿಂದಲೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

SCROLL FOR NEXT