ರಾಜ್ಯ

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ

Manjula VN

ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ. 

ಬಳಿಕ ಉಪಚುನಾವಣೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ, ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‌ಗೆ ವಾಪಸ್ ಆಗಲಿದ್ದೇನೆ. ಮೂರು ದಿನಗಳ ಕಾಲ ಹಾನಗಲ್​ನಲ್ಲಿ ಉಳಿದುಕೊಂಡು ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.

ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಸಂಬಂಧ ಸಂಪುಟ ಸಭೆಯಲ್ಲಿ ತೀರ್ಮಾನ ಆಗಬೇಕು ಎಂದು ಹೇಳಿದರು.

SCROLL FOR NEXT