ರಾಜ್ಯ

ನಿಫಾ ವೈರಸ್ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ: ಸಿಎಂ ಬಸವರಾಜ ಬೊಮ್ಮಾಯಿ 

Sumana Upadhyaya

ಬೆಂಗಳೂರು: ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಗೆ ಬಾಲಕ ಬಲಿಯಾಗಿ ಅಲ್ಲಿ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೊರೋನಾ ವೈರಸ್ ಹೆಚ್ಚಳ ಮತ್ತು ನಿಫಾ ವೈರಸ್ ಕಂಡುಬಂದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಗಡಿಭಾಗವನ್ನು ಸೀಲ್ ಡೌನ್ ಮಾಡಿ ಲಸಿಕೆ ನೀಡಿಕೆ ಮತ್ತು ಕೊರೋನಾ ಪರೀಕ್ಷೆಯನ್ನು ಹೆಚ್ಚಳ ಮಾಡಿದ್ದೆವು. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.

ನಿಫಾ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ತಜ್ಞರ ಬಳಿ ತಿಳಿದುಕೊಳ್ಳಲು ಹೇಳಿದ್ದು ಯಾವ ರೀತಿ ಹರಡುತ್ತದೆ, ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಲಹೆ ನೀಡುವಂತೆ ಮತ್ತು ವರದಿ ನೀಡುವಂತೆ ಸೂಚಿಸಿದ್ದೇನೆ. ನಿಫಾ ವೈರಸ್ನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ ಘೋಷಣೆ: ಕೇರಳ ರಾಜ್ಯದ ಕೋಝಿಕ್ಕೋಡು ಜಿಲ್ಲೆಯಲ್ಲಿ ನಿಫಾ ವೈರಸ್ ಕಂಡುಬಂದ ಹಿನ್ನೆಲೆಯಲ್ಲಿ ಗಡಿಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲೆಗೆ ಹೊರರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. 

ಮೂರು ವರ್ಷಗಳ ಹಿಂದೆ ಕೇರಳ ಮಾತ್ರವಲ್ಲದೆ ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡಿದ್ದು ಕೋಝಿಕ್ಕೋಡು ಮೂಲದ 13 ವರ್ಷದ ಬಾಲಕ ಬಲಿಯಾಗಿದ್ದಾನೆ. ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಅಲ್ಲಿನ ಆರೋಗ್ಯ ಇಲಾಖೆ ದೃಢಪಡಿಸಿದೆ. ಅಲ್ಲದೆ ಇಬ್ಬರು ಆರೋಗ್ಯ ಇಲಾಖೆ ಸಿಬ್ಬಂದಿಯಲ್ಲಿಯೂ ವೈರಸ್ ಕಂಡುಬಂದಿದೆ. ಬಾಲಕನ ಸಂಪರ್ಕದಲ್ಲಿದ್ದ 48 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊದಲಿಗೆ ನಿಫಾ ವೈರಸ್ ರೋಗ ಮೇ 19, 2018ರಲ್ಲಿ ಕೇರಳದ ಕೋಝಿಕ್ಕೋಡು ಜಿಲ್ಲೆಯಲ್ಲಿ ವರದಿಯಾಗಿತ್ತು. 2018ರ ಜೂನ್ 1 ರವರೆಗೆ ರಾಜ್ಯದಲ್ಲಿ 17 ಸಾವುಗಳು ಮತ್ತು 18 ದೃಢಪಟ್ಟ ಪ್ರಕರಣಗಳು ವರದಿಯಾಗಿದ್ದವು.

SCROLL FOR NEXT