ರಾಜ್ಯ

ಹೆಚ್ಚು ವಿದ್ಯುತ್ ಉತ್ಪಾದಿಸಲು ಸಚಿವರ ಪ್ಲಾನ್: ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಮೇಲೆ ಸೌರ ವಿದ್ಯುತ್‌ ಉತ್ಪಾದನಾ ಘಟಕ

Shilpa D

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಕಟ್ಟಡಗಳ ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿ, ವಿದ್ಯುತ್‌ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಂ.ನಾರಾಯಣಸ್ವಾಮಿ ಪ್ರಶ್ನೆಗೆ ಉತ್ತರಿಸಿ, ''ರಾಜ್ಯದಲ್ಲಿ 2020-21ನೇ ಸಾಲಿನಲ್ಲಿ ಸೌರಶಕ್ತಿ ಛಾವಣಿಯಿಂದ 233.49 ದಶಲಕ್ಷ ಯೂನಿಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. ಪ್ರಸಕ್ತ ವರ್ಷದಲ್ಲಿ ಜುಲೈ ಅಂತ್ಯದವರೆಗೆ 48.85 ದಶಲಕ್ಷ ಯೂನಿಟ್‌ ಉತ್ಪಾದನೆಯಾಗಿದೆ. ಈ ವರ್ಷ ಒಟ್ಟು 372 ದಶಲಕ್ಷ ಯೂನಿಟ್‌ ಉತ್ಪಾದಿಸುವ ಗುರಿ ಹೊಂದಲಾಗಿದೆ'' ಎಂದು ಹೇಳಿದರು.

'ಗ್ರಾಮ ಪಂಚಾಯಿತಿಗಳು ತಮ್ಮ ಕಟ್ಟಡಗಳ ಮೇಲೆ ಉತ್ಪಾದನೆಗೆ ಅನುಮತಿ ನೀಡದಿರಲು ತೀರ್ಮಾನಿಸಿವೆ. ಹೊರರಾಜ್ಯಗಳಿಂದ ವಿದ್ಯುತ್‌ ಖರೀದಿಸುವ ಹುನ್ನಾರದಿಂದ ಸೌರ ವಿದ್ಯುತ್‌ ಉತ್ಪಾದನೆ ಕಡಿಮೆ ಮಾಡಲಾಗುತ್ತಿದೆ,'' ಎಂದು ನಾರಾಯಣಸ್ವಾಮಿ ಆರೋಪಿಸಿದರು. ಸಚಿವ ವಿ.ಸುನಿಲ್‌ ಕುಮಾರ್‌, ''ಹೊರ ರಾಜ್ಯಗಳಿಂದ ವಿದ್ಯುತ್‌ ಖರೀದಿಸುವ ಯಾವುದೇ ಪ್ರಸ್ತಾವ ಇಲ್ಲ. ಸರಕಾರಿ ಕಟ್ಟಡಗಳ ಮೇಲ್ಛಾವಣಿಯಲ್ಲಿ ಸೌರಶಕ್ತಿ ಫಲಕಗಳನ್ನು ಅಳವಡಿಸಿ, ವಿದ್ಯುತ್‌ ಉತ್ಪಾದಿಸುವುದು ನೂತನ ಯೋಜನೆ. ಈಗಾಗಲೇ ವಿಕಾಸಸೌಧ ಛಾವಣಿಯಲ್ಲಿ 100 ಕಿ.ವ್ಯಾ ಸೌರ ಘಟಕಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

'ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ 15,193 ಮೆ.ವ್ಯಾ ವಿದ್ಯುತ್‌ ಉತ್ಪಾದನೆಯಾಗುತ್ತಿದ್ದು, ದೇಶದಲ್ಲೇ ನಂ. 1 ಸ್ಥಾನದಲ್ಲಿದೆ. ಕೆಇಆರ್‌ಸಿ ನಿಗದಿಪಡಿಸಿರುವ ಇಂಧನ ಖರೀದಿ ಗುರಿ ಸಾಧಿಸಿರುವುದರಿಂದ ಹೈಬ್ರಿಡ್‌ ಪ್ರಾಜೆಕ್ಟ್ಸ್‌ನಿಂದ ವಿದ್ಯುತ್‌ ಖರೀದಿಸುವ ಪ್ರಸ್ತಾವನೆ ಇಲ್ಲ,'' ಎಂದು ಸಚಿವ ವಿ.ಸುನಿಲ್‌ ಕುಮಾರ್‌ ತಿಳಿಸಿದರು.

SCROLL FOR NEXT