ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನಾಚರಣೆ ಹಾಗೂ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಅಂಗವಾಗಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಕ್ಷೇತ್ರ ಮಲ್ಲೇಶ್ವರದಲ್ಲಿನ ಸರ್ಕಾರಿ, ಬಿಬಿಎಂಪಿ ಶಾಲೆಯಲ್ಲಿ 1,000 ಟ್ಯಾಬ್ ಗಳು ಹಾಗೂ 350 ಲ್ಯಾಪ್ ಟಾಪ್ ಗಳನ್ನು ನಿನ್ನೆ ವಿತರಿಸಲಾಯಿತು. ಒಂದು ಲ್ಯಾಪ್ ಟಾನ್ ನ್ನು ಐವರು ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಹಂಚಿಕೊಳ್ಳಲಿದ್ದಾರೆ.
ವಿದ್ಯಾರ್ಥಿಗಳ ಹೆಚ್ಚಳದ ಸಂಖ್ಯೆಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಇವುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಭರವಸೆ ನೀಡಿದರು. ಶಿಕ್ಷಣ ಇಲಾಖೆಯಿಂದ ಸ್ಮಾರ್ಟ್ ಬೋರ್ಡ್ ಹಾಗೂ ಡಿಜಿಟಲ್ ಬೋಧನಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಪ್ರೇರಣಾ ಆ್ಯಪ್ ಗೆ ಚಾಲನೆ ನೀಡಲಾಯಿತು.
ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವಗುರುವನ್ನಾಗಿಸುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ್ದಾರೆ. ಶಿಕ್ಷಣ, ತಂತ್ರಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಸೂಕ್ತ ಆದ್ಯತೆ ನೀಡುವ ಮೂಲಕ ದೇಶವನ್ನು ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅಂತಹ ನಾಯಕರನ್ನು ನಾವು ಹೊಂದಿರುವುದು ನಮ್ಮ ಅದೃಷ್ಟ ಎಂದು ಅಶ್ವತ್ಥ ನಾರಾಯಣ ಹೇಳಿದರು.