ಬೆಂಗಳೂರು: ಕೊಡಗಿನಲ್ಲಿ ನಿನ್ನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ವಿವಾದಕ್ಕೆ ತಿರುಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರಿಗೆ ಈ ರೀತಿ ಅವಮಾನ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯ ಬೇಧವಿದ್ದರೆ ಪ್ರತಿಭಟನೆ ಮಾಡಬಹುದೇ ಹೊರತು ದೈಹಿಕವಾಗಿ ಹಲ್ಲೆ ಮಾಡುವುದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡುವುದು ಸರಿಯಲ್ಲ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು, ಇದು ಚುನಾವಣಾ ವರ್ಷ, ಜಾಗ್ರತೆಯಿಂದ ಮಾತಾಡಬೇಕು: ಆರಗ ಜ್ಞಾನೇಂದ್ರ
ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದು, ಆ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ, ಎಂದಿದ್ದಾರೆ.
ನಿನ್ನೆ ಸಿದ್ದರಾಮಯ್ಯನವರು ಕೊಡಗು ಜಿಲ್ಲಾ ಪ್ರವಾಸ ಹಾಗೂ ಮಳೆ ಹಾನಿ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಆರಂಭದಲ್ಲಿ ತಿತಿಮತಿಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇನ್ನು ಕುಶಾಲನಗರ ತಾಲ್ಲೂಕಿನ ಗೊಡ್ಡಹೊಸೂರಿನಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಬೇಕಾಯಿತು.