ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಗ್ರಾಮಗಳನ್ನು ಕರ್ನಾಟಕಕ್ಕೆ ಸೇರಿಸುವಂತೆ ಒತ್ತಾಯಿಸಿ ಜತ್ ತಾಲೂಕಿನ ನಿವಾಸಿಗಳು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ.
ಆದರೆ ಜತ್ ತಾಲೂಕಿನ ಗ್ರಾಮದ ನಿವಾಸಿಗಳ ಮನವೊಲಿಸುವ ಯಾವುದೇ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮಾಡುತ್ತಿಲ್ಲ, ಏಕನಾಥ್ ಶಿಂಧೆ ಸರ್ಕಾರಕ್ಕೆ ಜನರನ್ನು ಮನವೊಲಿಸುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ, ಇದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸೋಮವಾರ ಮಹಾರಾಷ್ಚ್ರ ಕೈಗಾರಿಕಾ ಸಚಿವ ಉದಯ್ ಸಾಮಂತ್ ಜತ್ ತಾಲೂಕಿನ ತಿಕುಂಡಿಗೆ ಭೇಟಿ ನೀಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ತಾಲೂಕನ್ನು ಅಭಿವೃದ್ಧಿ ಪಡಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಜತ್ ನಿವಾಸಿಗಳು ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಮಹಾರಾಷ್ಟ್ರ ಸರ್ಕಾರ ಪರಿಹರಿಸಲಿದೆ ಎಂದು ಸಮಂತ್ ಘೋಷಿಸಿದರು. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕರಿಸುವ ಮೂಲಕ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.
ಮಹಾರಾಷ್ಟ್ರದ ಗಡಿ ಭಾಗದಲ್ಲಿ ಉತ್ತಮ ಸಂಖ್ಯೆಯ ಸರ್ಕಾರಿ ಕನ್ನಡ ಶಾಲೆಗಳಿದ್ದು. ಅವುಗಳನ್ನು ಸರಿಪಡಿಸುವುದರ ಜೊತೆಗೆ ಹೊಸ ಮರಾಠಿ ಶಾಲೆಗಳನ್ನು ಸ್ಥಾಪಿಸುವುದಾಗಿ ವಿಶ್ವಾಸ ವ್ಯಕ್ತ ಪಡಿಸಿದರು.
ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಟೌಟ್ಗಳು ಮತ್ತು ಕನ್ನಡ ಬಾವುಟಗಳು ಟಿಕುಂಡಿಯಲ್ಲಿ ಸಾಮಂತ್ ಅವರನ್ನು ಸ್ವಾಗತಿಸಿದವು. ಕರ್ನಾಟಕದ ಜೊತೆ ಗ್ರಾಮಗಳ ವಿಲೀನಕ್ಕೆ ಮಹಾರಾಷ್ಟ್ರ ಸರ್ಕಾರ ಬೊಮ್ಮಾಯಿ ಸರ್ಕಾರಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ ನೀಡಬೇಕು ಎಂದು ನಿವಾಸಿಗಳು ಸಾಮಂತ್ಗೆ ತಿಳಿಸಿದರು.