ರಾಜ್ಯ

ಸಂಪುಟ ವಿಸ್ತರಣೆಗೆ ಹೆಚ್ಚಿದ ಒತ್ತಡ: ಅಧಿವೇಶನದ ನಡುವಲ್ಲೇ ದೆಹಲಿಗಿಂದು ಸಿಎಂ ಬೊಮ್ಮಾಯಿ ಭೇಟಿ

Manjula VN

ಬೆಂಗಳೂರು: ಬಿಜೆಪಿ ನಾಯಕರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಆಕಾಂಕ್ಷಿಗಳನ್ನು ಸಂಪುಟಕ್ಕೆ ಸೇರ್ಪಡೆ ಕುರಿತು ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಚಳಿಗಾಲದ ಅಧಿವೇಶನ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ.

ದೆಹಲಿಗೆ ಭೇಟಿ ನೀಡುವ ಮುಖ್ಯಮಂತ್ರಿಗಳು ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯ ಸರಕಾರವು ಎಸ್‌ಸಿಗಳಿಗೆ ಶೇ.15ರಿಂದ ಶೇ.17ಕ್ಕೆ ಮತ್ತು ಎಸ್‌ಟಿಗಳಿಗೆ ಶೇ.3ರಿಂದ ಶೇ.7ಕ್ಕೆ ಮೀಸಲಾತಿ ಹೆಚ್ಚಿಸುವ ಪ್ರಸ್ತಾವನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿ ನೀಡುವುದು ಸೇರಿದಂತೆ ನಾನಾ ವಿಷಯಗಳ ಕುರಿತು ಕೇಂದ್ರದ ನಾಯಕರೊಂದಿಗೆ ಸಿಎಂ ಬೊಮ್ಮಾಯಿ ಅವರು ಚರ್ಚೆ ನಡೆಸಲಿದ್ದಾರೆ.

ಏತನ್ಮಧ್ಯೆ, ಪಂಚಮಸಾಲಿಗಳು ತಮ್ಮ ಸಮುದಾಯಕ್ಕೆ ಮೀಸಲಾತಿಗೆ ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಹೆಚ್ಚಿಸಿದ್ದಾರೆ.

ಒಕ್ಕಲಿಗ ಮುಖಂಡರಿಂದಲೂ ತಮ್ಮ ಸಮುದಾಯವನ್ನು ಮೀಸಲಾತಿ ವ್ಯಾಪ್ತಿಗೆ ಸೇರಿಸಬೇಕೆಂಬ ಆಗ್ರಹವಿದೆ. ಈ ಎಲ್ಲ ವಿಚಾರಗಳ ಬಗ್ಗೆ ಪಕ್ಷದ ಮುಖಂಡರ ಜತೆ ಸಿಎಂ ಚರ್ಚೆ ನಡೆಸಲಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಮೀಸಲಾತಿ ನೀಡುವುದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೆಸರು ಹೇಳಲಿಚ್ಛಿಸದ ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ.

ಮಾಜಿ ಸಚಿವರಾದ ಈಶ್ವರಪ್ಪ ಮತ್ತು ಜಾರಕಿಹೊಳಿ ಇಬ್ಬರೂ ತಮ್ಮನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.

ಸಂಕ್ರಾಂತಿ ಹಬ್ಬದ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂಬ ಊಹಾಪೋಹ ಇದ್ದರೂ ಪಕ್ಷದ ಮುಖಂಡರು ಈ ಬಗ್ಗೆ ಒಲವು ತೋರಿಲ್ಲ.

ಆದರೆ, ಸಚಿವ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

“ಈ ಹಂತದಲ್ಲಿ ಯಾರನ್ನೂ ಸೇರಿಸಿಕೊಳ್ಳುವುದಿಲ್ಲ ಎಂದು ಪಕ್ಷದ ನಾಯಕರು ಸ್ಪಷ್ಟಪಡಿಸಿರುವುದರಿಂದ ಸಿಎಂ ಈ ಬಗ್ಗೆ ಚರ್ಚಿಸಲು ಹೋಗುವುದಿಲ್ಲ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ, ಮೀಸಲಾತಿ ಬೇಡಿಕೆಗಳು ಸೇರಿದಂತೆ ಇತರ ವಿಷಯಗಳಿದ್ದು, ಅದನ್ನು ಸದನದಲ್ಲಿ ಅಂಗೀಕರಿಸುವ ಮೊದಲು ಸಿಎಂ ಸ್ಪಷ್ಟನೆ ಬಯಸುತ್ತಾರೆ ಎಂದು ಹೇಳಿದರು.

SCROLL FOR NEXT