ರಾಜ್ಯ

ವಿವಿ, ಪದವಿ ಕಾಲೇಜುಗಳ ಬೋಧಕ- ಬೋಧಕೇತರ ಹುದ್ದೆಗಳ ನೇಮಕಾತಿ: ಕೆಇಎ ಮೂಲಕ ಪರೀಕ್ಷೆ- ಡಾ. ಅಶ್ವತ್ಥ ನಾರಾಯಣ

Nagaraja AB

ಬೆಂಗಳೂರು: ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಲಿಖಿತ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

2,100 ಹುದ್ದೆಗಳನ್ನು ನೇಮಕ ಮಾಡಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೆಇಎ ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುವುದು, ಯುಜಿಸಿ ನಿಯಾಮವಳಿ ಪ್ರಕಾರ ಸಂದರ್ಶನ ನಡೆಯಲಿದ್ದು, 1:3 ಅಥವಾ 1: 5 ಅನುಪಾತದಲ್ಲಿ ಆಯ್ಕೆ ಮಾಡಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 100 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಂಗ್ರಹವಾಗುವ ಶುಲ್ಕವನ್ನು ಇನ್ನು ಮುಂದೆ ಕಾಲೇಜುಗಳಲ್ಲೇ ಬಳಸಲು ಅವಕಾಶ ನೀಡಲಾಗಿದೆ. ಸ್ವಾತಂತ್ರ್ಯ ಬಂದ ಮೇಲೆ ಇದೇ ಮೊದಲು ಈ ರೀತಿಯ ತೀರ್ಮಾನ ಮಾಡಲಾಗಿದೆ. ವರ್ಷಕ್ಕೆ ಕನಿಷ್ಠ 50 ಕೋಟಿ ರೂ. ಹಣ ಕಾಲೇಜುಗಳಲ್ಲೇ ಉಳಿಯಲಿದ್ದು, ಅದರಿಂದ ಕಾಲೇಜುಗಳಲ್ಲಿನ ಸಣ್ಣಪುಟ್ಟ ಖರ್ಚುಗಳಿಗೆ ಅನುಕೂಲ ಆಗಲಿದೆ ಎಂದು ಅವರು ಹೇಳಿದರು. 

ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತಿದ್ದು ಇದೇ ಮೊದಲ ಬಾರಿಗೆ UUCMS ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಇದು ಸಂಪೂರ್ಣವಾಗಿ ಆನ್ ಲೈನ್‌ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಸಿಂಗಲ್ ಲಾಗಿನ್‌ನಿಂದಲೇ ಯಾವ ಕಾಲೇಜಿಗೆ ಬೇಕಾದರೂ ಅರ್ಜಿ ಹಾಕಬಹುದು ಎಂದು ಅವರು ತಿಳಿಸಿದರು. 

ಐಐಎಂ ಮಾದರಿಯಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಡಾ. ವಾಸುದೇವ ಅತ್ರೆ ಸಮಿತಿ ವರದಿ ನೀಡಿದೆ. ಇದರ ಪ್ರಕಾರ ಹೊಸ ಕಾಯ್ದೆ ರಚಿಸಲು ಉದ್ದೇಶಿಸಿದ್ದು, ಅದನ್ನು ಸಾರ್ವಜನಿಕರ ಅವಗಹನೆಗೆ ಉನ್ನತ ಶಿಕ್ಷಣ ಇಲಾಖೆ ವೆಬ್ ಸೈಟ್ ನಲ್ಲಿ ಹಾಕಲಾಗಿದೆ. ಸಾರ್ವಜನಿಕರು ಹೊಸ ಕಾಯ್ದೆ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದು ಎಂದು ಸಚಿವರು ತಿಳಿಸಿದರು.
 

SCROLL FOR NEXT