ರಾಜ್ಯ

ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ಪೂರೈಕೆ: ಜಾಲ ಭೇದಿಸಿದ ಪೊಲೀಸರಿಗೆ ಗೃಹ ಸಚಿವರ ಅಭಿನಂದನೆ

Nagaraja AB

ಬೆಂಗಳೂರು: ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ನೆಲೆಸಿದ್ದ ಭಯೋತ್ಪಾದಕನೊಬ್ಬನನ್ನು ಬಂಧಿಸಿದ ಬೆನ್ನಲ್ಲೇ, ನಗರ ಪೊಲೀಸರು ಅಕ್ರಮ ಬಾಂಗ್ಲಾ ದೇಶಿ ನಸುಳುಕೋರರಿಗೆ ಆಧಾರ್ ಕಾರ್ಡ್ ಹಾಗೂ ಇನ್ನಿತರ ದಾಖಲೆಗಳನ್ನು ಒದಗಿಸುತ್ತಿದ್ದ ಜಾಲವೊಂದನ್ನು  ಭೇದಿಸಿದ್ದಾರೆ.

ಅಧಿಕೃತ ಮಾಹಿತಿಗಳ ಪ್ರಕಾರ, ಈ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು ಹಲವರನ್ನು ಬಂಧಿಸಿ, ದಾಖಲೆಗಳನ್ನು ಅಕ್ರಮ ವಲಸಿಗರಿಗೆ ಪೂರೈಸುತ್ತಿದ್ದ ಒಂಬತ್ತು ವ್ಯಕ್ತಿಗಳನ್ನು  ವಶಕ್ಕೆ ಪಡೆದಿದ್ದಾರೆ. 

ಇತ್ತೀಚಿಗೆ ಬೆಂಗಳೂರು ನಗರ ಸರಹದ್ದಿನ ಪ್ರದೇಶವೊಂದರಲ್ಲಿ ನಡೆದಿದ್ದ ಎಟಿಎಂ ಜೊತೆಗೆ  18 ಲಕ್ಷ ರೂಪಾಯಿಗಳ ಲೂಟಿ ಪ್ರಕರಣ ಸಂಬಂಧ ಬಾಂಗ್ಲಾದೇಶಿ ನಾಗರಿಕನೊಬ್ಬನನ್ನು ಬಂಧಿಸಲಾಗಿತ್ತು. ಈತನ ವಿಚಾರಣೆ ಸಂದರ್ಭದಲ್ಲಿ ನಕಲಿ ದಾಖಲೆ ಒದಗಿಸುವ ಜಾಲದ ಬಗ್ಗೆ ಸುಳಿವು ಸಿಕ್ಕಿದ್ದು, ಪೊಲೀಸರು ಸಾಕ್ಷ್ಯಾಧಾರಗಳ ಸಮೇತ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ. 

ನಕಲಿ ದಾಖಲೆ ಪಡೆದು ಬೆಂಗಳೂರಿನಲ್ಲಿ ವಾಣಿಜ್ಯ ವ್ಯವಹಾರ ನಡೆಸುತ್ತಿದ್ದ  ಅಕ್ರಮ ವಲಸಿಗಾರ ಸುಮಾರು ನಾಲ್ಕು ಕೋಟಿ ರೂಪಾಯಿಗಳನ್ನು ಬಾಂಗ್ಲಾದೇಶಿ ಕರೆನ್ಸಿಯಾಗಿ ಪರಿವರ್ತಿಸಿ ಆ ದೇಶಕ್ಕೆ ಈಗಾಗಲೇ ವರ್ಗಾವಣೆ ಮಾಡಿದ್ದಾನೆ ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಬಂಧಿತರಲ್ಲಿ ಓರ್ವ ಸಾಫ್ಟ್ ವೇರ್ ಎಂಜಿನಿಯರ್ ಹಾಗೂ ಇನ್ನೊಬ್ಬ ಫಾರ್ಮಸಿಸ್ಟ್ ಆಗಿದ್ದು, ಈಗ ಪೊಲೀಸರ ವಶದಲ್ಲಿದ್ದು, ತನಿಖೆ ಎದುರಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇದ್ರ, ಅಕ್ರಮ ವಲಸೆ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಅಕ್ರಮ ವಲಸಿಗರು ಮತ್ತು ಅವರಿಗೆ ಆಶ್ರಯ ಹಾಗೂ ಇನ್ನಿತರ ಸಹಕಾರ ಒದಗಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿರುವವರ ಬಗ್ಗೆ ಸಮೀಕ್ಷೆ ನಡೆಸಿ ಕ್ರಮ ತೆಗೆದುಕೊಳ್ಳಲು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

SCROLL FOR NEXT