ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ರಾಜ್ಯದ ಕಾಂಗ್ರೆಸ್ ನಾಯಕರು ಗುರುವಾರ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ನಡೆಸಿ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾರೀ ಸಂಚಾರ ದಟ್ಟಣೆ ಸಮಸ್ಯೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.
ಇದನ್ನೂ ಓದಿ: ಚಡ್ಡಿ ಹೊತ್ಕೊಂಡು ಬಂದು ಪ್ರತಿಭಟನೆ ಮಾಡುವಾಗ ಕೊರೋನಾ ಇರಲಿಲ್ಲವಾ? ನಮಗೆ ಮಾತ್ರ ಕೊರೋನಾ ರೂಲ್ಸಾ: ಕಾಂಗ್ರೆಸ್ ನಾಯಕರ ಆಕ್ರೋಶ
ಪೊಲೀಸರು ಬ್ಯಾರಿಕೇಡ್ ಹಾಕಿ ಕ್ವೀನ್ಸ್ ರಸ್ತೆಯನ್ನು ಬಂದ್ ಮಾಡಿದ್ದು, ಪ್ರತಿಭಟನಾಕಾರರನ್ನು ತುಂಬಲು ಕ್ವೀನ್ಸ್ ರಸ್ತೆಯಲ್ಲಿ ಬಿಎಂಟಿಸಿ ಬಸ್ಸನ್ನು ಪೊಲೀಸರು ಅಡ್ಡ ಹಾಕಿದ್ದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ರಾಜ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದರು. ಬಳಿಕ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ವರದಿಗಳು ತಿಳಿಸಿವೆ.
ಪ್ರತಿಭಟನೆ ವೇಳೆ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್, ಪರಮೇಶ್ವರ್, ಶಾಸಕ ರಿಜ್ವಾನ್ ಹರ್ಷದ್, ಮಾಜಿ ಸಚಿವ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಪರಮೇಶ್ವರ್ ನಾಯಕ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ಓದಿ: ಕೊರೋನಾ ಸೋಂಕು ಹೆಚ್ಚುತ್ತಿರುವಾಗ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ನಡವಳಿಕೆ ನಾಚಿಕೆಗೇಡಿನ ಸಂಗತಿ: ಡಾ ಕೆ ಸುಧಾಕರ್
ನಿಗದಿತ ಸಮಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸದ ಕಾರಣ ಇಂದು ಬೆಳಿಗ್ಗೆ 9.30ಕ್ಕೆ ಆರಂಭವಾಗಬೇಕಿದ್ದ ಪ್ರತಿಭಟನಾ ಮೆರವಣಿಗೆ 11 ಗಂಟೆಗೆ ಆರಂಭವಾಯಿತು. ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು ಪಾಲ್ಗೊಂಡಿದ್ದು, ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಕೆಪಿಸಿಸಿ ಕಚೇರಿ ಎದುರು ಬಾವುಟ ಹಾಗೂ ಧ್ವಜಗಳನ್ನು ಹಿಡಿದ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾ ಮೆರವಣಿಗೆಗ ಆರಂಭಕ್ಕೂ ಮುನ್ನ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದೀರಿ, ಸಂಯಮ ಹಾಗೂ ಸೌಜನ್ಯದಿಂದ ನಡೆದುಕೊಳ್ಳಿ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿಕೊಂಡರು.
ಇದನ್ನೂ ಓದಿ: ರಾಹುಲ್ ಗಾಂಧಿ ಇಡಿ ವಿಚಾರಣೆಗೆ ವಿರೋಧ: ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ಆರಂಭ, ಜನತೆಗೆ ತಟ್ಟಿದ ಟ್ರಾಫಿಕ್ ಬಿಸಿ
ಸಿದ್ದರಾಮಯ್ಯ ಅವರು ಮಾತನಾಡಿ, ನಮ್ಮ ರಾಷ್ಟ್ರೀಯ ನಾಯಕರ ವಿರುದ್ಧ ಕೇಂದ್ರ ಸರ್ಕಾರ ನಡೆಸುತ್ತಿರುವ ಕಿರುಕುಳದ ವಿರುದ್ಧ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಕೆಪಿಸಿಸಿ ವತಿಯಿಂದ ಇಂದು ರಾಜಭವನ ಮುತ್ತಿಗೆ ಹಮ್ಮಿಕೊಂಡಿದ್ದೇವೆ. ನಮ್ಮ ಆಕ್ರೋಶವನ್ನು ಈ ರೂಪದಲ್ಲಿ ವ್ಯಕ್ತಪಡಿಸುತ್ತಿದ್ದೇವೆ. ಸಂವಿಧಾನ ಹಾಗೂ ಪ್ರಜಾತಂತ್ರವನ್ನು ಉಳಿಸುವುದಕ್ಕೋಸ್ಕರ ಮತ್ತು ದೇಶದ ಸ್ವಾಭಿಮಾನ ಉಳಿಸುವುದಕ್ಕೋಸ್ಕರ ಹೋರಾಟದಲ್ಲಿ ಭಾಗಿಯಾಗಿದ್ದೇವೆ ಎಂದು ಹೇಳಿದರು.