ರಾಜ್ಯ

ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ ಎನ್ಐಎ ಕ್ಷಿಪ್ರ ದಾಳಿ; 13 ಕಡೆ ಪರಿಶೀಲನೆ

Srinivasamurthy VN

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ಇಂದು ಬೆಳ್ಳಂ ಬೆಳಗ್ಗೆಯೇ. ವಿವಿಧ ರಾಜ್ಯದ ಹಿರಿಯ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 

ಮೂಲಗಳ ಪ್ರಕಾರ ಒಟ್ಟು 8 ವಾಹನಗಳಲ್ಲಿ 30 ರಾಷ್ಟ್ರೀಯ ತನಿಖಾ ದಳದ ಹಿರಿಯ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆ ಸೇರಿದಂತೆ ಬೆಳಗ್ಗೆಯಿಂದ ನಗರದ 18 ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸಿರುವ ತಂಡದಲ್ಲಿ ಕೇರಳ, ಆಂಧ್ರ ಪ್ರದೇಶದ ಅಧಿಕಾರಿಗಳೂ ಇದ್ದಾರೆ ಎನ್ನಲಾಗಿದೆ. ಇವರ ಜೊತೆಗೆ ಜಿಲ್ಲೆಯ ಅಧಿಕಾರಿಗಳು ಸೇರಿ ಒಟ್ಟು 90 ಅಧಿಕಾರಿಗಳು ವಿವಿಧ ಸ್ಥಳಗಳಿಗೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರ ಬೆಳಗ್ಗೆ ಐದು ಗಂಟೆಗೆ ದಾಳಿ ಆರಂಭವಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 13 ಕಡೆ ವಿಚಾರಣೆ ನಡೆಸಲಾಗಿದೆ. ಬೆಳಿಗ್ಗೆ 10 ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್‌ ತೆರಳಿದ್ದಾರೆ. ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಅಧಿಕಾರಿಗಳು ಸುಮಾರು 450 ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಫೆಬ್ರವರಿ 20ರಂದು ರಾತ್ರಿ 9 ಗಂಟೆ ಸಮಯದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಷ ಶವಯಾತ್ರೆ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
 

SCROLL FOR NEXT