ರಾಜ್ಯ

ಭಯೋತ್ಪಾದನೆ ನಿಯಂತ್ರಣಕ್ಕೆ ರಾಜ್ಯಗಳ ನಡುವೆ ಸಮನ್ವಯಕ್ಕೆ ಸಿಎಂ ಬೊಮ್ಮಾಯಿ ಒತ್ತಾಯ

Nagaraja AB

ಹಾಸನ: ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ರಾಜ್ಯಗಳ ನಡುವೆ ಸಮನ್ವಯದ ಅಗತ್ಯವಿದೆ ಎಂದು ಬುಧವಾರ ಒತ್ತಾಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಡಿ ದಾಟುವ ಶಂಕಿತ ಉಗ್ರರ ಚಲನವಲಗಳ ಬಗ್ಗೆ ನಿಗಾ ವಹಿಸಲು ಮತ್ತು ಹೆಚ್ಚಿನ ಜಾಗರೂಕರಾಗಿರಲು ವಿಶೇಷವಾಗಿ ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಡಿಜಿಪಿಗಳೊಂದಿಗೆ ಪತ್ರ ವ್ಯವಹಾರ ನಡೆಸಲಾಗುವುದು ಎಂದು ತಿಳಿಸಿದರು.

ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನೆರೆಯ ರಾಜ್ಯಗಳೊಂದಿಗೆ ಮಾಹಿತಿ ಹಂಚಿಕೊಳ್ಳುವುದು ಉತ್ತಮವಾಗಿದೆ. ತಾನು ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ನೆರೆ ರಾಜ್ಯಗಳಲ್ಲಿ ಗುಪ್ತಚರ ಮತ್ತು ಉಗ್ರ ನಿಗ್ರಹ ಪಡೆ ಬಲಗೊಳಿಸಲು ಅಲ್ಲಿನ ಡಿಜಿಪಿಗಳೊಂದಿಗೆ ಮಾತುಕತೆ ನಡೆಸಿದ್ದಾಗಿ ಹೇಳಿದರು.

ಇತ್ತೀಚಿಗೆ ಮಂಗಳೂರಿನಲ್ಲಿ ಸಂಭವಿಸಿದ ಆಟೋ ರಿಕ್ಷಾ ಸ್ಫೋಟ ಕುರಿತು ಗುಪ್ತಚರ ವಿಭಾಗವನ್ನು ದೂಷಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಗುಪ್ತಚರ ವಿಭಾಗ ಅಥವಾ ಯಾವುದೇ ಸಂಸ್ಥೆಯ ವಿಫಲತೆಯ ಪ್ರಶ್ನೆಯೇ ಇರಲ್ಲ. ಸಿದ್ದರಾಮಯ್ಯ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ. ಎಲ್ಲಾ ಸರ್ಕಾರಗಳ ಅವಧಿಯಲ್ಲಿ ಭಯೋತ್ಪಾದನೆ ಸಕ್ರಿಯವಾಗಿತ್ತು ಆದರೆ, ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಬಿಜೆಪಿ ಸರ್ಕಾರ ವಿಶೇಷ ಒತ್ತು ಕೊಟ್ಟಿದೆ ಎಂದರು. 

ಹಾಸನ, ಮೈಸೂರು, ಮಡಿಕೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಮತ್ತು ಮನುಷ್ಯರ ನಡುವಿನ ಸಂಘರ್ಷ ತಡೆಗೆ ಆನೆ ವಿಶೇಷ ಕಾರ್ಯಪಡೆ ಉಲ್ಲೇಖಿಸಿದ ಸಿಎಂ, ಮುಂದಿನ ದಿನಗಳಲ್ಲಿ ಆನೆಗಳ ಸ್ಥಳಾಂತರಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆನೆ ದಾಳಿಯಿಂದ ಮೃತರ ಕುಟುಂಬಗಳಿಗೆ ಪರಿಹಾರವನ್ನು ಹೆಚ್ಚಿಸುವ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.

SCROLL FOR NEXT