ಬೆಂಗಳೂರು: ಕರ್ನಾಟಕ ಸರಕಾರದ ವತಿಯಿಂದ ಈಗಾಗಲೇ 23 ಜಿಲ್ಲೆಗಳಲ್ಲಿ ಗಾಂಧಿಭವನ ನಿರ್ಮಿಸಲಾಗಿದ್ದು, ಇನ್ನೂ ಏಳು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣವಾಗಬೇಕಿದೆ. ಈ ಏಳು ಜಿಲ್ಲೆಗಳಲ್ಲಿ ಒಂದು ವರ್ಷದೊಳಗೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ತಿಳಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಗಾಂಧಿಸ್ಮಾರಕ ನಿಧಿ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಇಂದು ನಡೆದ ಮಹಾತ್ಮಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸುಪ್ರಸಿದ್ಧ ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ರಾಜ್ಯ ಸರಕಾರದ ಪ್ರತಿಷ್ಠಿತ 2022ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.
ಇದನ್ನು ಓದಿ: ಗಾಂಧಿ ಜಯಂತಿ: ನಂಜನಗೂಡಿನ ಬದನವಾಳು ಗ್ರಾಮೋದ್ಯೋಗ ಕೇಂದ್ರಕ್ಕೆ ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರ ಭೇಟಿ
ಉಳಿದ ಏಳು ಜಿಲ್ಲೆಗಳಲ್ಲಿ ಗಾಂಧಿಭವನ ನಿರ್ಮಾಣಕ್ಕೆ ಬೇಕಾದ ನಿವೇಶನ ಮತ್ತು ಅನುದಾನ ಒದಗಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ತಿಳಿಸಿದರು.
ಖಾದಿ, ಗ್ರಾಮೀಣ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು; ಈ ಮೂಲಕ ಮಾರುಕಟ್ಟೆ ಒದಗಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸುಪ್ರಸಿದ್ಧ ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ಪ್ರಶಸ್ತಿ ಸಂದಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿ ಅವರ ಸೇವೆಯನ್ನು ನಮ್ಮ ಸರಕಾರ ಬಳಸಿಕೊಳ್ಳಲಿದೆ ಎಂದರು.