ರಾಜ್ಯ

ಮೈಸೂರು: ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವಿನ ಪ್ರಕರಣ, 17 ಅರಣ್ಯಾಧಿಕಾರಿಗಳ ವಿರುದ್ಧ ಕೇಸು ದಾಖಲು

Sumana Upadhyaya

ಮೈಸೂರು: ಬಂಡೀಪುರ ಅರಣ್ಯ ವಲಯದ ಗುಂಡ್ರೆ ರೇಂಜ್ ನಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಅರಣ್ಯಾಧಿಕಾರಿಗಳ ವಶದಲ್ಲಿದ್ದ ವೇಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತ ಸರಗುರ್ ಪೊಲೀಸರು 17 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ ಸಿ/ಎಸ್ ಟಿಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.

ಪೊಲೀಸರು ದಾಖಲಿಸಿದ ಎಫ್‌ಐಆರ್ ನಲ್ಲಿ, ಪ್ರಕರಣದಲ್ಲಿ ರೇಂಜ್ ಫಾರೆಸ್ಟ್ ಆಫೀಸರ್ ಅಮೃತೇಶ್, ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ್ ಯಾದವ್, ಇಬ್ಬರು ಅರಣ್ಯಾಧಿಕಾರಿಗಳು ಮತ್ತು ಇತರ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹೊಸಹಳ್ಳಿ ಗ್ರಾಮದ ಕರಿಯಪ್ಪ ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಆರೋಪದ ಮೇಲೆ ಬಂಧಿತನಾಗಿದ್ದನು. ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿ ಆತ ಮೃತಪಟ್ಟಿದ್ದು, ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಶಾಸಕ ಅನಿಲ್ ಚಿಕ್ಕಮಾದು ಅವರು ಕರಿಯಪ್ಪ ಮೃತದೇಹ ಇರಿಸಿದ್ದ ಕೆಆರ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದರು. ಅವರ ಸಾವಿನ ಬಗ್ಗೆ ಸಿಐಡಿ ತನಿಖೆಗೆ ಒತ್ತಾಯಿಸಿದರು. ಹೆಚ್ ಡಿ ಕೋಟೆ ತಾಲೂಕಿನಲ್ಲಿ ಇದು ಎರಡನೇ ಘಟನೆಯಾಗಿದೆ ಎಂದು ಹೇಳಿರುವ ಶಾಸಕರು, ಮೃತರ ಶವದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದು, ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು. 

ಚಿಕ್ಕಮಾದು ಕರಿಯಪ್ಪ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡುವುದರ ಜೊತೆಗೆ ಅವರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು ಎಂದು ಕೂಡ ಒತ್ತಾಯಿಸಿದರು. ಈ ಮಧ್ಯೆ, ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಕರಿಯಪ್ಪ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು.

SCROLL FOR NEXT