ರಾಜ್ಯ

ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ, ಥೀಮ್ ಪಾರ್ಕ್ ಗೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

Sumana Upadhyaya

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗುರುವಾರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು.

ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ನಿರ್ಮಿಸುತ್ತಿರುವ ಕೆಂಪೇಗೌಡರ ಥೀಮ್​ ಪಾರ್ಕ್​​ಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಗುದ್ದಲಿ ಪೂಜೆ ನೆರವೇರಿಸಿದ್ಧಾರೆ.

108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕಾರ್ಯ ಈಗಾಗಲೇ ಮುಗಿಯುವ ಹಂತದಲ್ಲಿದ್ದು, ಥೀಮ್​ ಪಾರ್ಕ್​​​ಗೆ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಸಚಿವರಾದ ಆರ್​​.ಅಶೋಕ್​​, ಡಾ.ಅಶ್ವಥ್​​ ನಾರಾಯಣ್​​, ಡಾ.ಕೆ.ಸುಧಾಕರ್​​, ಕೆ.ಗೋಪಾಲಯ್ಯ, ಸಂಸದರಾದ ಡಿ.ವಿ.ಸದಾನಂದಗೌಡ, ಪಿಸಿ ಮೋಹನ್​​, ಬಿಡಿಎ ಅಧ್ಯಕ್ಷ ಎಸ್​.ಆರ್​​​.ವಿಶ್ವನಾಥ್​​​, ರಾಜ್ಯ ಸಭೆ ಸದಸ್ಯ ಜಗ್ಗೇಶ್​, ಎಂಎಲ್​ಸಿ ವೈ. ನಾರಾಯಣಸ್ವಾಮಿ ಮತ್ತಿತರರು ಭಾಗಿಯಾಗಿದ್ದರು.

ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ನೆನಪನ್ನು ಅಜರಾಮರಗೊಳಿಸಲು ಮತ್ತು ಇಡೀ ನಾಡಿನ ಜನತೆಯನ್ನು ಏಕತೆಯ ಮನೋಭಾವದಲ್ಲಿ ಒಗ್ಗೂಡಿಲು ರಾಜ್ಯ ಸರ್ಕಾರ 45 ದಿನಗಳ ವಿಶಿಷ್ಟ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಇಂದು ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಈ ಅಭಿಯಾನ ರಾಜ್ಯದ 31 ಜಿಲ್ಲೆಗಳಲ್ಲಿಯೂ ನಡೆಯಲಿದೆ. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ 'ನಾಡ ಕಟ್ಟೋಣ ಬನ್ನಿ' ಎಂಬ ಘೋಷವಾಕ್ಯವನ್ನು ರೂಪಿಸಿದೆ.

ಜಾಗತಿಕ ಮಟ್ಟದಲ್ಲಿ ಕೆಂಪೇಗೌಡರ ಹೆಸರು: ಬೆಂಗಳೂರು ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಲು ಕೆಂಪೇಗೌಡರೇ ಮೂಲ ಕಾರಣ. ಅವರ ಪ್ರತಿಮೆಯ ಉದ್ಘಾಟನೆಯಲ್ಲಿ ಇಡೀ ರಾಜ್ಯದ ಜನರು ಪ್ರತ್ಯಕ್ಷವಾಗಿಯೋ ಅಥವಾ ಪರೋಕ್ಷವಾಗಿಯೋ ಪಾಲ್ಗೊಳ್ಳಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಎಲ್ಲ ಜಿಲ್ಲೆಗಳ ಪ್ರತಿ ಹಳ್ಳಿಯ ಪವಿತ್ರ ಮೃತ್ತಿಕೆಯನ್ನು (ಮಣ್ಣು)ಆಯಾ ಊರುಗಳಲ್ಲಿರುವ ಕೆರೆ ಕಟ್ಟೆ, ಕಲ್ಯಾಣಿ, ನದಿ, ಪುಷ್ಕರಣಿ, ಕೊಳ, ಚಿಲುಮೆ ಮತ್ತು ಝರಿಗಳಿಂದ ಸಂಗ್ರಹಿಸಲು ಯೋಜನೆ ರೂಪಿಸಲಾಗುತ್ತಿದೆ. ಜತೆಗೆ ನಾಡಿನ ಉದ್ದಗಲಕ್ಕೂ ಇರುವ ಅನುಕರಣೀಯ ಸಾಧಕರ ಮನೆಗಳಿಂದಲೂ ಪವಿತ್ರ ಮಣ್ಣನ್ನು ಸಂಗ್ರಹಿಸಲಾಗುತ್ತದೆ. 

ನವೆಂಬರ್‌ ಅಥವಾ ಡಿಸೆಂಬರ್‌ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿ, ವಿಮಾನ ನಿಲ್ದಾಣದ ಸಮುಚ್ಚಯದಲ್ಲಿ ತಲೆ ಎತ್ತುತ್ತಿರುವ ಕೆಂಪೇಗೌಡರ ಭವ್ಯವಾದ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸುವುದು ಅದರ ಸದುದ್ದೇಶವಾಗಿದೆ.

SCROLL FOR NEXT