ಚಿಕ್ಕಬಳ್ಳಾಪುರ: ಕ್ಯಾಂಟರ್ ನಿಂದ ಸಂಭವಿಸಿದ ಸರಣಿ ಅಪಘಾತದಿಂದಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಇನ್ನು ನಾಲ್ವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ವೇಳೆ ಹೋಟಲ್ ಮುಂದೆ ನಿಂತಿದ್ದ ಐದು ಕಾರುಗಳು ಜಖಂಗೊಂಡಿವೆ.
ಹೆದ್ದಾರಿಯಲ್ಲಿ ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಕ್ಯಾಂಟರ್ ರಸ್ತೆ ಬದಿಯಿದ್ದ ರಾಮದೇವರಗುಡಿ ಪ್ರಣವ್ ಹೋಟಲ್ ಗೆ ನುಗ್ಗಿದೆ. ಘಟನೆಯಲ್ಲಿ ಹೋಟಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ ಗಾಯಗಳಾಗಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ ಎನ್ನಲಾಗಿದೆ.
ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ ಎಲ್ ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾಂಟರ್ ಚಾಲಕ ಅಜೀತ್ನನ್ನು ಬಂಧಿಸಲಾಗಿದ್ದು ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.