ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ದ್ರೌಪದಿ ಮುರ್ಮು ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆಯಲ್ಲಿ ಭಾನುವಾರ ತಿಳಿಸಿದೆ.
ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಆಯೋಜಿಸಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ರಾಷ್ಟ್ರಪತಿ, ಧಾರವಾಡದಲ್ಲಿ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನೂತನ ಕ್ಯಾಂಪಸ್ ನ್ನು ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: ಮೈಸೂರು ದಸರಾಕ್ಕೆ ದಿನಗಣನೆ ಆರಂಭ: ರಾಷ್ಟ್ರಪತಿಗಳಿಗೆ ವಿದ್ಯುಕ್ತ ಆಹ್ವಾನ, ಗಜಪಡೆಗಳಿಗೆ ಇಂದು ಮೂರನೇ ಸಿಡಿಮದ್ದು ತಾಲೀಮು
ಮಂಗಳವಾರ ಬೆಂಗಳೂರಿನಲ್ಲಿ ಹೆಚ್ ಎಎಲ್ ನ ಇಂಟಿಗ್ರೆಟೆಡ್ ಕ್ರಯೊಜಿನಿಕ್ ಎಂಜಿನ್ಸ್ ತಯಾರಿಕಾ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ.ಇದೇ ಸಂದರ್ಭದಲ್ಲಿ ದಕ್ಷಿಣ ವಲಯ ವೈರಾಣು ಸಂಸ್ಥೆಗೆ ವರ್ಚುಯಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಂದೇ ಸೆಂಟ್ ಜೋಸೆಫ್ ವಿವಿ ಸಮಾರಂಭ ಹಾಗೂ ಕರ್ನಾಟಕ ಸರ್ಕಾರದಿಂದ ಆಯೋಜಿಸಿರುವ ನಾಗರಿಕ ಸನ್ಮಾನ ಸಮಾರಂಭದಲ್ಲಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ.
ಸೆಪ್ಟೆಂಬರ್ 28 ರಂದು ರಾಷ್ಟ್ರಪತಿ ನವದೆಹಲಿಗೆ ವಾಪಸ್ಸಾಗಲಿದ್ದಾರೆ.