ರಾಜ್ಯ

ದೇಗುಲದ ಆವರಣದಲ್ಲಿ ಆಣೆ-ಪ್ರಮಾಣ: ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲು..!

Manjula VN

ಗದಗ: ದೇವಸ್ಥಾನದ ಆವರಣದಲ್ಲಿ ಆಣೆ ಪ್ರಮಾಣ ಮಾಡಿದ ಬಿಜೆಪಿ ಮುಖಂಡರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ನೀತಿ ಸಂಹಿತೆ‌ ಉಲ್ಲಂಘನೆ ಮಾಡಿದ ಬಿಜೆಪಿ ಎಂಎಲ್‌ಸಿ, ಶಾಸಕ ಹಾಗೂ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರು ಹಾಗೂ ಟಿಕೆಟ್‌ ಆಕಾಂಕ್ಷಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಿಜೆಪಿ ಎಂಎಲ್‌ಸಿ ಪ್ರದೀಪ ಶೆಟ್ಟರ್‌, ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಬಿಬಿಎಂಸಿ ಅಧ್ಯಕ್ಷೆ ಉಷಾ ದಾಸರ್‌, ಡಾ.ಚಂದ್ರು ಲಮಾಣಿ, ಗುರುನಾಥ ದಾನಪ್ಪನವರ್‌, ಭೀಮಸಿಂಗ್‌ ರಾಠೋಡ್‌ ಅವರು ಇತ್ತೀಚೆಗೆ ಐತಿಹಾಸಿ ಸೋಮೇಶ್ವರ ದೇವಸ್ಥಾನದಲ್ಲಿ ಸಭೆ ನಡೆಸಿದರು. ಈ ವೇಳೆ ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಎಂದು ಆಣೆ ಪ್ರಮಾಣ ಮಾಡಿದ್ದರು.

ಈ ಹಿನ್ನೆಲಯೆಲ್ಲಿ ನಾಯಕರ ವಿರುದ್ಧ ಧಾರ್ಮಿಕ ಸ್ಥಳಗಳ ದುರುಪಯೋಗ 1988ರ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ.

ಶಿರಹಟ್ಟಿಯಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಶಾಸಕ ರಾಮಣ್ಣ ಲಮಾಣಿ ವಿರುದ್ಧ ದೂರು ನೀಡಿದ್ದು, ವಿಧಾನಸಭೆ ಚುನಾವಣೆಗೆ ಇತರೆ ನಾಯಕರಿಗೆ ಟಿಕೆಟ್ ನೀಡುವಂತೆ ರಾಜ್ಯ ನಾಯಕರಿಗೆ ಮನವಿ ಮಾಡಿದ್ದಾರೆ. ಮನವಿಯ ಬಳಿಕವೂ ರಾಮಣ್ಣ ಅವರಿಗೆ ಟಿಕೆಟ್ ನೀಡಿದ್ದೇ ಆದರೆ, ಬೇರೆ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಹೀಗಾಗಿ ಈ ಬೆಳವಣಿಗೆ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು ಎಂಬುದನ್ನು ಮನಗಂಡ ಹಿರಿಯ ನಾಯಕರು ಎಲ್ಲಾ ಟಿಕೆಟ್ ಆಕಾಂಕ್ಷಿಗಳನ್ನು ಸೋಮೇಶ್ವರ ದೇವಸ್ಥಾನಕ್ಕೆ ಕರೆಸಿ ಪಕ್ಷದ ಪರ ಪ್ರಚಾರ ಮಾಡುವುದಾಗಿ ಪ್ರತಿಜ್ಞೆ ಮಾಡುವಂತೆ ಹೇಳಿದ್ದಾರೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪಕ್ಷದ ಹಿರಿಯ ಮುಖಂಡರೊಬ್ಬರು, ಐತಿಹಾಸಿಕ ದೇವಾಲಯವನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶ ನಮಗಿರಲಿಲ್ಲ ಮತ್ತು ನಮ್ಮ ಎಲ್ಲಾ ನಾಯಕರು ಸೋಮೇಶ್ವರನ ಭಕ್ತರು. ದೇವಸ್ಥಾನದ ಆವರಣದಲ್ಲಿ ಪ್ರತಿಜ್ಞೆ ಮಾಡಿದರೆ, ಪ್ರತಿಜ್ಞೆಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ. ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ, ನಾವು ದೇಶದ ಕಾನೂನನ್ನು ಗೌರವಿಸುತ್ತೇವೆಂದು ಹೇಳಿದ್ದಾರೆ.

SCROLL FOR NEXT